ಮಂಗಳೂರು, ಜೂನ್ 30: ಅನಿರೀಕ್ಷಿತ ಬೆಳವಣಿಗೆಯಲ್ಲಿ ಕರ್ನಾಟಕ ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನೂ ಕೇರಳ ಸರಕಾರ ಇದೀಗ ಮಣ್ಣು ಮುಚ್ಚಿ ಬಂದ್ ಮಾಡಿದೆ. ಮಂಗಳೂರು ಹಾಗೂ ಕಾಸರಗೋಡಿಗೆ ಸಂಪರ್ಕ ಕಲ್ಪಿಸುವ ಈ ಒಳ ರಸ್ತೆಗಳನ್ನು ಕಾಸರಗೋಡು ಜಿಲ್ಲಾಧಿಕಾರಿ ನೇತೃತ್ವದಲ್ಲೇ ಬಂದ್ ಮಾಡಲಾಗಿದೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟೀವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲಾಡಳಿತ ಈ ದಿಢೀರ್ ನಿರ್ಧಾರವನ್ನು ತೆಗೆದುಕೊಂಡಿದೆ. ಬೆರಿಪದವು, ಪಾದೆಕಲ್ಲು, ಮುಗುಳಿ ಹಾಗೂ ಪದ್ಯಾಣ ಮೊದಲಾದ ಕಡೆಗಳಿಂದ ದಕ್ಷಿಣಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸಂಪೂರ್ಣ ಮುಚ್ಚಲಾಗಿದೆ.

ಗಡಿ ಭಾಗದ ಜನ ಇದೇ ರಸ್ತೆಯ ಮೂಲಕ ತಮ್ಮ ಕೆಲಸ ಕಾರ್ಯಗಳಿಗೆ ಮಂಗಳೂರು ಸಂಪರ್ಕಿಸುತ್ತಿದ್ದರು. ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಇದೀಗ ಕೊರೊನಾ ಪಾಸಿಟೀವ್ ಹೆಚ್ಚಿನ ಸಂಖ್ಯೆಯಲ್ಲಿ ಹರಡುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೇರಳ ಸರಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎನ್ನಲಾಗಿದೆ.

Share Information