Connect with us

    DAKSHINA KANNADA

    ಗುಡ್ಡ ಕುಸಿತ, ಮಡಿಕೇರಿ-ಸಂಪಾಜೆ‌ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ನಿಷೇಧಿಸಿದ ಕೊಡಗು ಜಿಲ್ಲಾಡಳಿತ..!

    ಮಡಿಕೇರಿ : ಸುಳ್ಯ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು ಮುಂಜಾಗೃತಾ ಕ್ರಮವಾಗಿ ಜುಲೈ 22ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

    ಸಾರ್ವಜನಿಕ ಹಿತದೃಷ್ಟಿಯಿಂದ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ಮತ್ತು ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989ರ (ತಿದ್ದುಪಡಿ ನಿಯಮಗಳು 1990) ನಿಯಮ 221ಎ(5)ರಲ್ಲಿ ಪದತ್ತವಾದ ಅಧಿಕಾರವನ್ನು ಚಲಾಯಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಈ ಆದೇಶ ಹೊರಡಿಸಿದ್ದಾರೆ.ಮಂಗಳೂರು – ಮಡಿಕೇರಿ ಹೆದ್ದಾರಿ ಬಂದ್ ಮಾಡಲಾಗುವುದು. ಇಂದು(ಜುಲೈ 18) ರಾತ್ರಿ 8 ಗಂಟೆಯಿಂದ ಜುಲೈ 22 ರ ಬೆಳಗ್ಗೆ 6 ಗಂಟೆವರೆಗೆ ಹೆದ್ದಾರಿಯಲ್ಲಿ ಮಡಿಕೇರಿಯಿಂದ ಸಂಪಾಜೆವರೆಗೆ ರಾತ್ರಿ ವೇಳೆ ಎಲ್ಲ ರೀತಿಯ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ ಎಂದು ತಿಳಿಸಿದ್ದಾರೆ.

    ರಾತ್ರಿ ವೇಳೆಯ ರಸ್ತೆ ಸಂಚಾರಕ್ಕೆ ನಿಷೇಧ ಹೇರುವಂತೆ ಮಡಿಕೇರಿಯ ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆಯಲ್ಲಿ, ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ನೀಡಿರುವ ವರದಿಯಂತೆ ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅತಿ ಹೆಚ್ಚಿನ ಮಳೆಯಾಗುವ ಎಚ್ಚರಿಕೆ ಇರುತ್ತದೆ. ಹವಾಮಾನ ಇಲಾಖೆಯ ವರದಿಯಂತೆ ಸಾರ್ವಜನಿಕ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಎಂಬ ಭಾಗದಲ್ಲಿ ಮುಂಜಾಗ್ರತಾ ಕ್ರಮವಾಗಿ ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿ-ಸಿಬ್ಬಂದಿಗಳು ಸಂಚರಿಸುವ ವಾಹನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸುವಂತೆ ಸೂಚಿಸಿದ್ದರು. ಹೀಗಾಗಿ, ನಿರ್ಬಂಧಿಸುವುದು ಸೂಕ್ತವೆಂದು ಕಂಡುಬಂದ ಕಾರಣ ಕೊಡಗು ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply