BANTWAL
ಕೆಎಸ್.ಆರ್.ಟಿ.ಸಿ. ಬಸ್ ಚಾಲಕನ ಅಜಾಗರೂಕತೆಗೆ ದ್ವಿಚಕ್ರ ಸವಾರ ಬಲಿ..!
ಬಂಟ್ವಾಳ, ಎಪ್ರಿಲ್ 13 : ಕೆಎಸ್.ಆರ್.ಟಿ.ಸಿ.ಬಸ್ಸೊಂದು ದ್ವಿಚಕ್ರಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.
ಮೃತ ಯುವಕನನ್ನು ಇಲ್ಲಿನ ಸಮೀಪದ ಸರಪಾಡಿ ನಿವಾಸಿ 30 ವರ್ಷದ ಸೇಸಪ್ಪ ಯಾನೆ ಶ್ರೇಯಸ್ ಎಂದು ಗುರುತಿಸಲಾಗಿದೆ. ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಈತ ಸಂಜೆ ವೇಳೆ ಕೆಲಸ ಮುಗಿಸಿ ಮನೆಗೆ ದ್ವಿಚಕ್ರದಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ.
ಬಿಸಿರೋಡು ಕಡೆಯಿಂದ ಧರ್ಮಸ್ಥಳ ಹೆದ್ದಾರಿಯಲ್ಲಿ ಶ್ರೇಯಸ್ ಸರಪಾಡಿಯಲ್ಲಿರುವ ತನ್ನ ಮನೆಗೆ ದ್ವಿಚಕ್ರದಲ್ಲಿ ಹೋಗುತ್ತಿದ್ದ ವೇಳೆ ಧರ್ಮಸ್ಥಳ ಕಡೆಯಿಂದ ವೇಗವಾಗಿ ಬರುತ್ತಿದ್ದ ಸರಕಾರಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ದ್ವಿಚಕ್ರಕ್ಕೆ ಡಿಕ್ಕಿಯಾಗಿದೆ.
ಕೂಡಲೇ ಸವಾರನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕೊಂಡು ಹೋಗಲಾಯಿತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಶ್ರೇಯಸ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.
ಅಪಘಾತ ರಭಸಕ್ಕೆ ದ್ವಿಚಕ್ರಕ್ಕೆ ಸಂಪೂರ್ಣ ನಜ್ಜು ಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಮೂರ್ತಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
You must be logged in to post a comment Login