Connect with us

DAKSHINA KANNADA

ಗುಂಡ್ಯ – ಕೆಎಸ್ ಆರ್ ಟಿಸಿ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ

ನೆಲ್ಯಾಡಿ ಮೇ 19: ಲಾರಿ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಮೇ 18ರಂದು ಸಂಜೆ ನಡೆದಿದೆ. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 2 ತಾಸು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು ವಾಹನ ಸವಾರರು ಪರದಾಟ ನಡೆಸಿದ ಘಟನೆಯೂ ನಡೆದಿದೆ.


ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಮಂಗಳೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಲಾರಿ ನಡುವೆ ಗುಂಡ್ಯ ಪೇಟೆಯಿಂದ ಸುಮಾರು 100 ಮೀಟರ್ ದೂರದಲ್ಲಿರುವ ಅಪಾಯಕಾರಿ ತಿರುವಿನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಇದರಿಂದಾಗಿ ಎರಡು ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಬಸ್ಸಿನ ಚಾಲಕ ಧರ್ಮಸ್ಥಳ ಸಮೀಪದ ಬೆಳಾಲು ನಿವಾಸಿ ಶ್ರೀನಿವಾಸ(37), ಲಾರಿ ಚಾಲಕ ಕನಕಪುರ ನಿವಾಸಿ ಮಂಜುನಾಥ(44), ಬಸ್‌ನಲ್ಲಿದ್ದ ಪ್ರಯಾಣಿಕರಾದ ಸಕಲೇಶಪುರದ ಪ್ರಣಯ್(16), ನೆಲಮಂಗಲ ನಿವಾಸಿ ಸಿದ್ದಲಿಂಗಪ್ಪ(48) ಎಂಬವರು ಗಾಯಗೊಂಡಿದ್ದಾರೆ.

ಗಂಭೀರ ಗಾಯಗೊಂಡಿದ್ದ ಶ್ರೀನಿವಾಸ ಹಾಗೂ ಪ್ರಣಯ್ ಅವರಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇನ್ನಿಬ್ಬರು ಗಾಯಾಳುಗಳಾದ ಮಂಜುನಾಥ ಹಾಗೂ ಸಿದ್ದಲಿಂಗಪ್ಪ ಅವರು ನೆಲ್ಯಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಅಪಘಾತದಿಂದಾಗಿ ಎರಡೂ ಘನ ವಹನಗಳು ರಸ್ತೆಗೆ ಅಡ್ಡಲಾಗಿ ನಿಂತ ಪರಿಣಾಮ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಇದರಿಂದಾಗಿ ಎರಡೂ ದಿಕ್ಕುಗಳಲ್ಲಿ ಸುಮಾರು 10 ಕಿ.ಮೀ. ದೂರದ ತನಕ ವಾಹನಗಳ ಸಾಲು ಕಂಡುಬಂದಿತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *