DAKSHINA KANNADA
ಸಂಬಳ ನೀಡುವಂತೆ ಒತ್ತಾಯಿಸಿ ಪುತ್ತೂರು ಕೆ.ಎಸ್.ಆರ್.ಟಿ.ಸಿ ನೌಕರರ ಧರಣಿ ಸತ್ಯಾಗ್ರಹ….
ಪುತ್ತೂರು ಅಕ್ಟೋಬರ್ 21: ಸಂಬಳ ನೀಡದೆ ಸತಾಯಿಸುತ್ತಿರುವ ಕೇಂದ್ರ ಕಛೇರಿಯ ಅಧಿಕಾರಿಗಳ ವಿರುದ್ಧ ಕೆ.ಎಸ್.ಆರ್.ಟಿ.ಸಿ ನೌಕರರು ಧರಣೆ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.
ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಸಿಬ್ಬಂದಿಗಳು ಬಿಎಂಎಸ್ ಸಂಘಟನೆಯ ನೇತೃತ್ವದಲ್ಲಿ ಈ ಪ್ರತಿಭಟನೆಯನ್ನು ಆರಂಭಿಸಿದ್ದು, ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಈ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ. ಅಕ್ಟೋಬರ್ ನಲ್ಲಿ ಅರ್ಧ ಸಂಬಳ ನೀಡಿದ್ದು, ಬಳಿಕ ಸಂಬಳವನ್ನೇ ನೀಡದೆ ಕೇಂದ್ರ ಕಛೇರಿಯ ಅಧಿಕಾರಿಗಳು ನೌಕರರ ವಿರುದ್ಧ ದೌರ್ಜನ್ಯ ಎಸಗುತ್ತಿದ್ದಾರೆ. ಈ ಬಗ್ಗೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೇರಿದಂತೆ ಕೆ.ಎಸ್.ಆರ್.ಟಿ.ಸಿ ಯ ಉನ್ನತ ಅಧಿಕಾರಿಗಳೂ ಮನವಿ ಮಾಡಲಾಗಿದೆ.
ಉಸ್ತುವಾರಿ ಸಚಿವರು ಮನವಿಗೆ ಸ್ಪಂದಿಸಿ ತಕ್ಷಣವೇ ಸಂಬಳ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರೂ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನಲೆಯಲ್ಲಿ ಇಂದಿನಿಂದ ಅಕ್ಟೋಬರ್ 25 ರ ತನಕ ಧರಣಿ ಸತ್ಯಾಗ್ರಹ ಮುಂದುವರಿಸಲಾಗುವುದು. ಸರಕಾರ ಈ ಬಗ್ಗೆ ಸೂಕ್ತ ನಿರ್ಧಾರಕ್ಕೆ ಬರದೇ ಹೋದಲ್ಲಿ 25 ರ ಬಳಿಕ ಅಮರಣಾಂತ ಉಪವಾಸ ಧರಣಿ ಆರಂಭಿಸಲಾಗುವುದು ಎಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಿಎಂಎಸ್ ಘಟಕದ ಅಧ್ಯಕ್ಷ ಗಿರಿಶ್ ಮಳಿ ಎಚ್ಚರಿಸಿದ್ದಾರೆ. ಅಲ್ಲದೆ ಸಂಬಳ ನೀಡದೆ ಸತಾಯಿಸುತ್ತಿರುವ ಅಧಿಕಾರಿಗಳ ವಿರುದ್ಧ ವೈಯಕ್ತಿಕ ಕೇಸು ದಾಖಲಿಸಲಾಗುವುದು ಎಂದರು.
You must be logged in to post a comment Login