DAKSHINA KANNADA
ನೆಲ್ಯಾಡಿ – ರಾಷ್ಟ್ರೀಯ ಹೆದ್ದಾರಿ 75ರ ಮೇಲೆ ಕುಸಿದ ಗುಡ್ಡ – ವಾಹನ ಸಂಚಾರದಲ್ಲಿ ಅಡಚಣೆ

ನೆಲ್ಯಾಡಿ ಜೂನ್ 24: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು ಘಟನೆ ನಡೆದಿದ್ದು, ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ.ರೋಡ್ನಿಂದ ಅಡ್ಡಹೊಳೆ ತನಕ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಮಣ್ಣಗುಂಡಿಯಲ್ಲಿ ರಸ್ತೆ ನಿರ್ಮಾಣ ಸಂದರ್ಭ ಗುಡ್ಡ ಅಗೆಯಲಾಗಿದೆ. ಇಲ್ಲಿ ನೇರವಾಗಿ ಗುಡ್ಡ ಅಗೆದಿರುವುದರಿಂದ ಕೆಲ ದಿನಗಳಿಂದ ಮಣ್ಣು ಜರಿಯುತ್ತಿದ್ದು ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇಂದು ಸುರಿದ ಭಾರೀ ಮಳೆಯಿಂದಾಗಿ ಸಂಜೆ ವೇಳೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಜರಿದಿದ್ದು ಮಣ್ಣು ಮರಗಳ ಸಮೇತ ರಸ್ತೆಗೆ ಬಿದ್ದಿದೆ. ಇದರಿಂದಾಗಿ ರಸ್ತೆ ಸಂಪೂರ್ಣ ಮುಚ್ಚಿಹೋಗಿದೆ ಎಂದು ವರದಿಯಾಗಿದೆ.

ದೊಡ್ಡ ವಾಹನಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದರೆ, ಕೆಲವು ಸಣ್ಣ ವಾಹನಗಳು ಕಿರಿದಾದ ಜಾಗದಲ್ಲಿ ಸಂಚಾರ ನಡೆಸುತ್ತಿದೆ. ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ರಸ್ತೆಗೆ ಸಂಬಂಧಪಟ್ಟವರು ಮಣ್ಣನ್ನು ತೆರೆವುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ. ಈ ಮಾರ್ಗದ ಮೇಲೆ ನಿರಂತರವಾಗಿ ಅನಾಹುತಗಳು ನಡೆಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ಮೌನವಹಿಸಿದ್ದಾರೆ ಎಂಬ ಆರೋಪ ವ್ಯಾಪಕವಾಗಿದೆ. ಕಾಮಗಾರಿ ಗುಣಮಟ್ಟ, ಸುರಕ್ಷತಾ ಕ್ರಮಗಳ ಅವ್ಯವಸ್ಥೆ, ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯ ಕುರಿತು ಸಾರ್ವಜನಿಕ ಆಕ್ರೋಶ ತೀವ್ರಗೊಂಡಿದೆ.