ಮಂಗಳೂರು ಎಪ್ರಿಲ್ 21: ಉತ್ತರ ಕರ್ನಾಟಕ ಭಾಗದ ಅನೇಕ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬದವರು ವರ್ಗಾವಣೆ ಕೋರಿ ಸಲ್ಲಿಸಿರುವ ಮನವಿಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು, ಹಂತ ಹಂತವಾಗಿ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಪಿ ಭರವಸೆ ನೀಡಿದರು.

ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಕಾನೂನು ಮತ್ತು ಸುವ್ಯವಸ್ಥೆ ಉತ್ತಮವಾಗಿದ್ದು, ಇದೇ ರೀತಿಯ ಶಾಂತಿ ಮತ್ತು ಸೌಹಾರ್ದತೆಯನ್ನು ಮುಂದೆಯೂ ಕಾಪಾಡಿಕೊಂಡು ಹೋಗುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಅಲ್ಲದೆ, ಸಾರ್ವಜನಿಕರೊಂದಿಗೆ ಸೌಹಾರ್ದಯುತ ಬಾಂಧವ್ಯ ಇರಿಸಿಕೊಳ್ಳುವಂತೆ ಇಲಾಖೆಯ ಸಿಬ್ಬಂದಿಗೆ ನಿರ್ದೇಶನ ನೀಡಿದರು.
ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಡಿ.ಸಿ.ಆರ್.ಇ. ಎಸ್ಪಿ ಎಸ್.ಎಸ್. ಕಾಶಿನಾಥ್ ಅವರು ಸಲ್ಲಿಸಿದ್ದಾರೆ ಎನ್ನಲಾದ ದೂರಿನ ಕುರಿತು ಮಾಧ್ಯಮಗಳು ಪ್ರಶ್ನಿಸಿದಾಗ, ಡಿಜಿಪಿ ಯಾವುದೇ ಪ್ರತಿಕ್ರಿಯೆ ನೀಡದೆ ಮೌನವಾಗಿಯೇ ಸ್ಥಳದಿಂದ ನಿರ್ಗಮಿಸಿದರು. ಇಲಾಖೆಯ ಆಂತರಿಕ ಜಟಾಪಟಿಯ ಬಗ್ಗೆ ಡಿಜಿಪಿ ಅವರ ಈ ಮೌನ ಹಲವು ಚರ್ಚೆಗಳಿಗೆ ದಾರಿ ಮಾಡಿಕೊಟ್ಟಿದೆ.