BELTHANGADI
ಪಾಪ ಪ್ರಜ್ಞೆ ಪರಿಹರಿಸಿಕೊಳ್ಳಲು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಶರಣಾಗುತ್ತೇನೆ ಎಂದ ವ್ಯಕ್ತಿ – ಪತ್ರ ವೈರಲ್

ಬೆಳ್ತಂಗಡಿ ಜೂನ್ 23: ದಕ್ಷಿಣಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪತ್ರದಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಹತ್ಯೆ ಮತ್ತು ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಕೊಲೆಗಳನ್ನು ಮುಚ್ಚಿಹಾಕುವ ಸಲುವಾಗಿ, ಮೃತ ದೇಹಗಳನ್ನು ಹೂತು ಹಾಕಿದ್ದ ವ್ಯಕ್ತಿಯೊಬ್ಬ ತನ್ನ ಪಾಪಪ್ರಜ್ಞೆಯನ್ನು ಪರಿಹರಿಸಿಕೊಳ್ಳಲು ಧರ್ಮಸ್ಥಳ ಪೊಲೀಸ್ ಠಾಣೆಗೆ ಕೂಡಲೇ ಹಾಜರಾಗಿ ಶರಣಾಗುವ ನಿರ್ಧಾರ ಮಾಡಿರುತ್ತಾನೆ. ಮತ್ತು, ತಾನು ಹೂತು ಹಾಕಿರುವ ಮೃತದೇಹಗಳನ್ನು ಪೋಲೀಸರ ಸಮ್ಮುಖದಲ್ಲಿ ಹೊರತೆಗೆಯುವ ನಿರ್ಧಾರ ಮಾಡಿರುತ್ತಾನೆ; ಇತ್ತೀಚೆಗೆ ಹೊರ ತೆಗೆದ ಕಳೇಬರವೊಂದುನ್ನು ಪೋಲೀಸರಿಗೆ ಒಪ್ಪಿಸುವುದಾಗಿ ಹೇಳಿದ್ದಾನೆ.

ಈ ಪತ್ರ ವೈರಲ್ ಆದ ಬೆನ್ನಲ್ಲೆ ಪೊಲೀಲ್ ಇಲಾಖೆ ಪ್ರಕಟಣೆ ನೀಡಿದ್ದು, ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವುದು ಕಂಡುಬಂದಿರುತ್ತದೆ. ಈ ಪತ್ರದ ನೈಜತೆಯನ್ನು ಪರಿಶೀಲಿಸುವ ಸಲುವಾಗಿ, ಸದ್ರಿ ಪತ್ರದಲ್ಲಿ ನಮೂದಿಸಲಾಗಿದ್ದ ಬೆಂಗಳೂರಿನ ವಕೀಲರಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಸಂಪರ್ಕಿಸಿದಾಗ, ಸದ್ರಿ ವಕೀಲರು ವ್ಯಕ್ತಿಯೋರ್ವ ತನ್ನ ಬಳಿ ಬಂದು ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತನಗೆ ಮಾಹಿತಿ ಇರುವುದಾಗಿ ಹಾಗೂ ತಾನು ಪೊಲೀಸ್ ಠಾಣೆಗೆ ಶರಣಾಗಿ ಮಾಹಿತಿಯನ್ನು ನೀಡಲು ಸಿದ್ದವಿರುವುದಾಗಿ ತಿಳಿಸಿರುತ್ತಾರೆ. ಸದ್ರಿ ವ್ಯಕ್ತಿಗೆ ಅಗತ್ಯವಾದ ಕಾನೂನು ಸುರಕ್ಷತೆಯನ್ನು ಕಲ್ಪಿಸಿ, ಆ ಬಳಿಕ ಆತನನ್ನು ಹಾಜರುಪಡಿಸುವುದಾಗಿ ವಕೀಲರು ತಿಳಿಸಿರುತ್ತಾರೆ.
ಅದರಂತೆ ಸದ್ರಿ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಈ ಬೆಳವಣಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ.