Connect with us

    DAKSHINA KANNADA

    ಲೋಕಸಮರ@24 :ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ, ಮತದಾನದ ಹಕ್ಕು ಚಲಾಯಿಸಿದ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳು..!

    ಮಂಗಳೂರು : ದೇಶದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಶುಕ್ರವಾರ ಆರಂಭವಾಗಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಉರಿ ಬಿಸಿಲು, ಸುಡುವ ಸೆಕೆಯ ಮಧ್ಯೆ ಮತದಾರರು ಉತ್ಸಾಹದಿಂದ ಮತಗಟ್ಟೆಗಳತ್ತ ಸಾಗಿ ಬರುತ್ತಿದ್ದು, ದ.ಕ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ಮಂಗಳೂರು ನಗರದ ಕಪಿತಾನಿಯೊ 179 ನೇ ಮತಗಟ್ಟೆಗೆ ಕುಟುಂಬ ಸಮೇತ ಆಗಮಿಸಿ ಸರತಿ ಸಾಲಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.


    ಬಿಜೆಪಿ ಅಭ್ಯರ್ಥಿ ಬ್ರಿಜೆಶ್ ಚೌಟ ಅವರು ಮಂಗಳೂರು ನಗರದ ರಥಬೀದಿಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತದಾನ ಮಾಡಿದರು.

    ಸಂಸದ ನಳಿನ್ ಕುಮಾರ್ ಕಟೀಲ್ ಅವರು ನಗರದ ಲೇಡಿಹಿಲ್ ಸಂತ ಅಲೋಶಿಯಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಬಂದು ಮತ ಚಲಾಯಿಸಿದರು. ಇದೇ ಸಂದರ್ಭ ಅಲ್ಲಿ ಬಂದಿದ್ದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಆಶೀರ್ವಾದ ಪಡೆದ ಪ್ರಸಂಗವೂ ನಡೆಯಿತು.


    ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ಗಾಂಧಿನಗರದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೂತ್ ನಂಬರ್ 86 ರಲ್ಲಿ ಕುಟುಂಬ ಸಮೇತ ಮತ ಚಲಾಯಿಸಿದರು. ರಾಷ್ಟ್ರದ ಪ್ರಗತಿಗಾಗಿ ಪ್ರತಿಯೊಬ್ಬರೂ ಮತ ಚಲಾಯಿಸಿ ತಮ್ಮ ಕರ್ತವ್ಯವನ್ನು ಪಾಲಿಸುವ ಮೂಲಕ ಪ್ರಜಾಪ್ರಭುತ್ವದ ಅತೀ ದೊಡ್ಡ ಕಾರ್ಯದಲ್ಲಿ ಜವಾಬ್ದಾರಿಯಿಂದ ಭಾಗವಹಿಸೋಣವೆಂದು ಇದೇ ಸಂದರ್ಭ ಕರೆ ನೀಡಿದರು.

    ಮಂಗಳೂರು ಉತ್ತರದ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ನಗರದ ಕದ್ರಿ ಕರ್ನಾಟಕ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಮತದಾನ ಮಾಡಿದರು.

    ಕೆಪಿಸಿಸಿ ಕಾರ್ಯಾಧ್ಯಕ್ಷರು ಮತ್ತು ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ಹಾಗು ಆವರ ಧರ್ಮಪತ್ನಿ ಶ್ರೀಮತಿ ಪ್ರಸನ್ನ ಭಂಡಾರಿ ಯವರು ಮಂಗಳೂರಿನ ಕದ್ರಿ ಬೂತ್ ನ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು..

    ಪ್ರಜಾಪ್ರಭುತ್ವದ ಮಹಾಹಬ್ಬದಲ್ಲಿ ಭಾಗಿಯಾದ ವಿಧಾನಸಭೆಯ ಸ್ಪೀಕರ್  ಯು ಟಿ ಖಾದರ್ ಅವರು ಉಳ್ಳಾಲ ತಾಲೂಕಿನ ಬೋಳಿಯಾರು ಸರ್ಕಾರಿ ಶಾಲೆಯಲ್ಲಿನ ಬೂತ್ ನಂಬರ್ 103

    ಕುಟುಂಬ ಸಹಿತವಾಗಿ ಬಂದು ಸರತಿ ಸಾಲಲ್ಲಿ ನಿಂತು  ಮತದಾನ ಮಾಡಿದರು.

    ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಭಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಲೇಡಿಹಿಲ್ ಶಾಲೆಯಲ್ಲಿ, ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಕುಂಪಲದ ಸರಕಾರಿ ಶಾಲೆಯಲ್ಲಿ ಮತದಾನ ಮಾಡಿದ್ದಾರೆ.

     

    ಸಿಪಿಐಎಂ ಮುಖಂಡ ಬಿಕೆ ಇಮ್ತಿಯಾಝ್ ಅವರು ಮತಗಟ್ಟೆ ಸಂಖ್ಯೆ 49 ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯ ಮತಕೇಂದ್ರದಲ್ಲಿ ಕುಟುಂಬ ಸಮೇತ ಬಂದು ಮತ ಚಲಾಯಿಸಿದರು.

    ರಾಜ್ಯ ಸಭಾ ಸದಸ್ಯರು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದ ಎಸ್ ಡಿ ಎಮ್ ಶಾಲೆಯಲ್ಲಿ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದರು.

    ಇದೇ ಸಂದರ್ಭ ವೀರೇಂದ್ರ ಹೆಗ್ಗಡೆಯವರ ಸಹೋದರ ಹರ್ಷೇಂದ್ರ ಕುಮಾರ್ ಹಾಗೂ ದಂಪತಿ ಕೂಡ ಆಗಮಿಸಿ ಮತದಾನದ ಪ್ರಕ್ರೀಯೆಯಲ್ಲಿ ಭಾಗಿಯಾದರು.
    ಪುತ್ತೂರಿನಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಮತದಾನ ಮಾಡಿದರು/

     

    Share Information
    Advertisement
    Click to comment

    You must be logged in to post a comment Login

    Leave a Reply