DAKSHINA KANNADA
ವೈಭವದ ಮಂಗಳೂರು ದಸರಾ ಸಂಪನ್ನ, ಕ್ಷೇತ್ರದ ಪುಷ್ಕರಣಿಯಲ್ಲಿ ನವದುರ್ಗೆಯರೊಂದಿಗೆ ಶಾರದಮಾತೆ ಜಲ ಸ್ತಂಭನ..!

ಮಂಗಳೂರು : ಶ್ರೀ ಶಾರದಾಮಾತೆ, ನವದುರ್ಗೆಯರು ಹಾಗೂ ಶ್ರೀ ಮಹಾಗಣಪತಿ ದೇವರ ವೈಭವದ ಮೆರವಣಿಗೆ ಮೂಲಕ ವಿಶ್ವ ಪ್ರಸಿದ್ದಿ ಪಡೆದ ಮಂಗಳೂರು ದಸರಾ ಅದ್ದೂರಿಯಾಗಿ ಸಂಪನ್ನಗೊಂಡಿದೆ.
ಕಳೆದ 9 ದಿನಗಳಿಂದ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಶ್ರೀ ದೇವರ ಆರಾಧನೆ ಅದ್ಧೂರಿಯಾಗಿ ನಡೆದುಕೊಂಡು ಬಂದಿತ್ತು. ಮೊಗ್ಗು ಮಲ್ಲಿಗೆಯ ಶಾರದಾ ಜಲ್ಲಿ, ವಿಶೇಷ ಪಟ್ಟೆ ಸೀರೆ, ವಿವಿಧ ಆಭರಣಗಳೊಂದಿಗೆ ಅಲಂಕೃತಳಾದ ಶಾರದಾ ಮಾತೆಗೆ ಮಧ್ಯಾಹ್ನದ ಬಳಿಕ ನಿಮಜ್ಜನಾ ಪೂಜೆ ನೆರವೇರಿತು.

ಸಂಜೆಯಾಗುತ್ತಿದ್ದಂತೆ ಶೋಭಾಯಾತ್ರೆಗೆ ಸಿದ್ಧತೆ ಮಾಡಿ ಮೊದಲಿಗೆ ಶ್ರೀ ಮಹಾಗಣಪತಿ ದೇವರನ್ನು, ನವದುರ್ಗೆಯರನ್ನು ಅಲಂಕೃತ ತೆರೆದ ವಾಹನದಲ್ಲಿ ಇಡಲಾಯಿತು.
ಬಳಿಕ ತಾಯಿ ಶಾರದೆಯನ್ನು ವಿಶೇಷ ವಾಹನದಲ್ಲಿ ಇರಿಸಿ ಆಕರ್ಷಕ ಶೋಭಾಯಾತ್ರೆಗೆ ನಾಂದಿ ಹಾಡಲಾಯಿತು.
ಬ್ರಹ್ಮಶ್ರೀ ನಾರಾಯಣ ಗುರುಗಳ ಟ್ಯಾಬ್ಲೊ ಮುಂದೆ ಇದ್ದು, ಬಳಿಕ ಶ್ರೀ ಮಹಾಗಣಪತಿ, ನವದುರ್ಗೆಯರು ಹಾಗೂ ಶಾರದಾ ಮಾತೆಯ ವಾಹನ ಅನುಸರಿಸಿತು.
ಆಕರ್ಷಕ ಟ್ಯಾಬ್ಲೋಗಳು, ಸ್ತಬ್ಧಚಿತ್ರಗಳು ಶೋಭಾಯಾತ್ರೆಯ ಮೆರುಗು ಹೆಚ್ಚಿಸಿತು.
ಮಂಗಳವಾರ ಸಂಜೆ 4 ರ ಸುಮಾರಿಗೆ ಆರಂಭವಾದ ಈ ಶೋಭಾಯಾತ್ರೆಯು ಶ್ರೀ ಕ್ಷೇತ್ರ ಕುದ್ರೊಳಿಯಿಂದ ಹೊರಟು ರಾತ್ರಿಯಿಡೀ ನಗರದ ಪ್ರಮುಖ ಬೀದಿಗಳಲ್ಲಿ ಸುಮಾರು 9 ಕಿ.ಮೀ. ದೂರ ಸಂಚರಿಸಿ ಬುಧವಾರ ಮುಂಜಾನೆ ವೇಳೆಗೆ ಮರಳಿ ಶ್ರೀಕ್ಷೇತ್ರಕ್ಕೆ ಆಗಮಿಸಿತು.
ನವರಾತ್ರಿಯ ಸಮಯದಲ್ಲಿ ಪೂಜಿಸಲ್ಪಟ್ಟು ದಸರಾ ಮೆರವಣಿಗೆಯಲ್ಲಿ ಸಾಗಿದ ಶಾರದಾ ಮಾತೆ ಕುದ್ರೋಳಿ ಕ್ಷೇತ್ರದ ಪುಷ್ಕರಣಿಯಲ್ಲಿ ನವದುರ್ಗೆಯರೊಂದಿಗೆ ಇಂದು ಜಲ ಸ್ತಂಭನವಾದರು. ಈ ಮೂಲಕ ಅದ್ದೂರಿ ಹಾಗೀ ವಿಶ್ವ ವಿಖ್ಯಾತ ಮಂಗಳೂರು ದಸರಾ ಸಂಪನ್ನಗೊಂಡಿತ್ತು.