LATEST NEWS
ಮಂಗಳೂರು ದಸರಾ – ಪಾಲಿಕೆ ವತಿಯಿಂದ ನಗರದಲ್ಲಿ ದೀಪಾಲಂಕಾರ

ಮಂಗಳೂರು ಸೆಪ್ಟೆಂಬರ್ 21: ಮಂಗಳೂರು ದಸರಾ ಮಹೋತ್ಸವಕ್ಕೆ ಈ ಬಾರಿ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.
ಮಂಗಳೂರು ದಸರಾ ಖ್ಯಾತಿ ದೇಶದೆಲ್ಲೆಡೆ ಹಬ್ಬುತ್ತಿದೆ. ಕರಾವಳಿ ಭಾಗದಲ್ಲಿ ಮಂಗಳೂರು ದಸರಾ ಹೊಸ ಹುರುಪು ನೀಡಿತಿದ್ದು ಇದಕ್ಕೆ ಪೂರಕವಾಗಿ ಪಾಲಿಕೆಯ ವತಿಯಿಂದ ನಗರದಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ಮಂಗಳಾದೇವಿ ದೇವಸ್ಥಾನ, ರಥಬೀದಿ ವೆಂಕಟರಮಣ ದೇವಸ್ಥಾನ, ಡೊಂಗರಕೇರಿ ವೆಂಕಟರಮಣ ದೇವಸ್ಥಾನ ಸೇರಿದಂತೆ ನಗರದಲ್ಲಿ ನವರಾತ್ರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮಂಗಳೂರು ದಸರಕ್ಕೆ ವಿಶ್ವವಿಖ್ಯಾತ ಮೈಸೂರು ದಸರಾ ಮಾದರಿಯಲ್ಲಿ ಮನ್ನಣೆ ದೊರೆಯುತಿದ್ದು ಮುಂಬರುವ ದಿನಗಳಲ್ಲಿ ದೇಶ ವಿದೇಶದಿಂದ ಭಕ್ತರನ್ನು ಆಕರ್ಷಿಸುತ್ತದೆ ಎಂದು ಹೇಳಿದ್ದಾರೆ.

ಮಂಗಳೂರು ದಸರಾ ಮೂಲಕ ಈ ಭಾಗದ ಆರ್ಥಿಕ, ಉದ್ಯಮ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಆಧ್ಯತೆ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಪಾಲಿಕೆಯ ವತಿಯಿಂದ ಮಹತ್ವದ ನಿರ್ಣಯ ಕೈಗೊಂಡು ನಗರದ ದೀಪಾಲಂಕಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದೆ ಯಾವುದೇ ಆಡಳಿತ ವ್ಯವಸ್ಥೆ ಬಂದರೂ ದೀಪಾಲಂಕಾರದ ವ್ಯವಸ್ಥೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ದಸರಾ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಉದ್ಘಾಟನೆ
ಮಂಗಳೂರು ದಸರಾ ಸಂದರ್ಭದಲ್ಲಿ ಸದ್ಯ ನಿರ್ಮಾಣ ಹಂತದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಉದ್ಘಾಟನೆಯಾಗಲಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ತ್ವರಿತ ಗತಿಯಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅಂತಿಮ ಹಂತ ತಲುಪಿದೆ. ದಸರಾ ಸಂಭ್ರಮಾಚರಣೆಯ ಸಂದರ್ಭದಲ್ಲಿ ಉದ್ಘಾಟನೆಗೆ ಸಿದ್ಧವಾಗಲಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.