Connect with us

    DAKSHINA KANNADA

    ಮಂಗಳೂರು: ಪ್ರಧಾನಿ ಮೋದಿ ಭೇಟಿ ಹಿನ್ನೆಲೆ- ಸಂಚಾರ ಮಾರ್ಗದಲ್ಲಿ ಬದಲಾವಣೆ

    ಮಂಗಳೂರು, ಆಗಸ್ಟ್ 31: ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಮಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಆದೇಶ‌ ಹೊರಡಿಸಿದ್ದಾರೆ.

    ಸುಗಮ ಸಂಚಾರ, ಭದ್ರತೆ ಹಾಗೂ ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಮತ್ತು ಸಂಚಾರ ಸುವ್ಯವಸ್ಥೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2ರ ಬೆಳಿಗ್ಗೆ 6ರಿಂದ ಪ್ರಧಾನಿ ಕಾರ್ಯಕ್ರಮ ಮುಗಿಸಿ ನಿರ್ಗಮಿಸುವವರೆಗೂ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

    ಪ್ರಧಾನಿ ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ನಿರ್ದಿಷ್ಟ ಸ್ಥಳಗಳಲ್ಲಿ ಪಾರ್ಕಿಂಗ್ ಗೆ ವ್ಯವಸ್ಥೆ ಕಲ್ಪಿಸಲಾಗಿದೆ.

    ನಿತ್ಯ ಸಂಚರಿಸುವ ವಾಹನಗಳ ಮಾರ್ಗಗಳನ್ನು ಅಂದು ಬದಲಾವಣೆ ಮಾಡಲಾಗಿದೆ.

    ಸಂಚಾರ ನಿಷೇಧ ಎಲ್ಲೆಲ್ಲಿ ?

    ಮಂಗಳೂರು ವಿಮಾನ ನಿಲ್ದಾಣದಿಂದ ಕಂಜಾರು – ಮರವೂರು – ಮರಕಡ – ಕಾವೂರು – ಬೊಂದೇಲ್ – ಪದವಿನಂಗಡಿ – ಯೆಯ್ಯಾಡಿ – ರಾಷ್ಟ್ರೀಯ ಹೆದ್ದಾರಿ 66 ರ ಕೆ.ಪಿ.ಟಿ. ಜಂಕ್ಷನ್‌ನಿಂದ – ಕೊಟ್ಟಾರ ಚೌಕಿ ಕೂಳೂರು – ಎನ್ಎಂಪಿಎವರೆಗೆ ಹಾದು ಹೋಗುವ ರಸ್ತೆಗಳ ಎರಡೂ ಬದಿಗಳಲ್ಲಿ ಎಲ್ಲಿ ರೀತಿಯ ವಾಹನಗಳ ನಿಲುಗಡೆಯನ್ನು ಬೆಳಿಗ್ಗೆ 6ರಿಂದ ಸಂಜೆ 6ರ ತನಕ ನಿಷೇಧಿಸಲಾಗಿದೆ.

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಂಗ್ರಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದ ಮತ್ತು ಸುತ್ತಲಿನ 500 ಮೀಟರ್ ವ್ಯಾಪ್ತಿಯ ರಸ್ತೆಗಳಲ್ಲಿ ಬೆಳಿಗ್ಗೆ 6ರಿಂದ ಸಂಜೆ 5ರ ತನಕ ಎಲ್ಲ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

    ಬಂಗ್ರ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದ ಸಾರ್ವಜನಿಕ ಸಮಾವೇಶಕ್ಕೆ ಬರುವ ಅತಿ ಗಣ್ಯ ವ್ಯಕ್ತಿಗಳು, ಗಣ್ಯ ವ್ಯಕ್ತಿಗಳು, ಫಲಾನುಭವಿಗಳು ಮತ್ತು ಸಾರ್ವಜನಿಕರು ಉಪಯೋಗಿಸುವ ವಾಹನಗಳನ್ನು ನಿಗದಿತ ಪಾರ್ಕಿಂಗ್ ಸ್ಥಳಗಳಿಗೆ ಸಂಚರಿಸಲು ಮತ್ತು ತುರ್ತು ಸೇವೆಯ ವಾಹನಗಳು ಈ ನಿಷೇಧಿತ ರಸ್ತೆಗಳಲ್ಲಿ ಸಂಚರಿಸಲು ಅನುಮತಿ ನೀಡಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply