ಮಂಗಳೂರು ಜೂನ್ 29: ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ಬಳಿ ಸೋಮವಾರ (ಜೂನ್ 29) ಬೆಳಗ್ಗಿನ ಜಾವ ಕೇರಳ ಮೂಲದ ಪ್ರಮುಖ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿದ 7-8 ಮಂದಿ ದರೋಡೆಕೋರರ ತಂಡ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಆಘಾತಕಾರಿ ಘಟನೆ ವರದಿಯಾಗಿದೆ.

ಕೇರಳದ ಪಯ್ಯನ್ನೂರು ನಿವಾಸಿ, ಉದ್ಯಮಿ ವಿಕಾಸ್ ಎಂಬುವರು ಪತ್ನಿ ಮತ್ತು ಮಗನೊಂದಿಗೆ ಮುಂಬೈನಲ್ಲಿ ನಡೆದಿದ್ದ ಸ್ನೇಹಿತನೊಬ್ಬನ ಮದುವೆ ಸಮಾರಂಭ ಮುಗಿಸಿಕೊಂಡು ಸ್ವಗ್ರಾಮಕ್ಕೆ ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ಈ ಕೃತ್ಯ ನಡೆದಿದೆ. ಸೋಮವಾರ ಬೆಳಗ್ಗಿನ ಜಾವ ಸುಮಾರು 2:30ರ ಸುಮಾರಿಗೆ ಉದ್ಯಮಿ ವಿಕಾಸ್ ಅವರ ಕಾರು ಬೈಕಂಪಾಡಿಯ ಸಮೀಪ ತಲುಪುತ್ತಿದ್ದಂತೆ, ಮೂರು ಕಾರುಗಳಲ್ಲಿ ಹೊಂಚು ಹಾಕಿ ಬಂದಿದ್ದ ಸುಮಾರು 7 ರಿಂದ 8 ಮಂದಿ ದರೋಡೆಕೋರರು ವಿಕಾಸ್ ಅವರ ಕಾರನ್ನು ಬಲವಂತವಾಗಿ ರಸ್ತೆ ಮಧ್ಯೆಯೇ ತಡೆದು ನಿಲ್ಲಿಸಿದ್ದಾರೆ. ತಕ್ಷಣವೇ ಕಾರಿನ ಬಳಿ ಬಂದ ದರೋಡೆಕೋರರು ವಿಕಾಸ್ ಅವರನ್ನು ಬಲತ್ಕಾರವಾಗಿ ಕೆಳಕ್ಕೆ ಇಳಿಸಿ, ಕಾರಿನಲ್ಲಿದ್ದ ಅವರ ಪತ್ನಿ ಹಾಗೂ ಮಗನನ್ನು ಅದೇ ಕಾರಿನ ಸಮೇತ ಅಪಹರಿಸಿಕೊಂಡು ಅತಿ ವೇಗವಾಗಿ ಅಲ್ಲಿಂದ ಪರಾರಿಯಾಗಿದ್ದಾರೆ.
ವಿಕಾಸ್ ಅವರ ಪತ್ನಿ ಮತ್ತು ಮಗನನ್ನು ಅಪಹರಿಸಿದ ದರೋಡೆಕೋರರು ಅವರನ್ನು ನಂತರ ಕುಳೂರು ಸಮೀಪ ಇಬ್ಬರನ್ನೂ ಕಾರಿನಿಂದ ಇಳಿಸಿ, ಕಾರಿನಲ್ಲಿದ್ದ ಚಿನ್ನ ಮತ್ತು ನಗದಿನೊಂದಿಗೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ನಗದು ದೋಚಲಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಈ ದರೋಡೆ ಪ್ರಕರಣದ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ದುಷ್ಕರ್ಮಿಗಳು ಬಂದ ಎರಡು ಇನ್ನೋವಾ, ಒಂದು ಸ್ವಿಫ್ಟ್ ಕಾರು ಹಾಗೂ ವಿಕಾಸ್ ಅವರ ಕಾರಿನ ಚಲನವಲನ ದೃಶ್ಯಗಳಲ್ಲಿ ದಾಖಲಾಗಿದೆ. ಸಿಸಿಟಿವಿಯಲ್ಲಿ ಮೊದಲು ಇನ್ನೋವಾ ಕಾರು ವಿಕಾಸ್ ಅವರ ಕಾರಿನ ಮುಂದೆ ಬಂದು ಅಡ್ಡಗಟ್ಟಿರುವುದು ಕಾಣಿಸಿದೆ. ನಂತರ ವಿಕಾಸ್ ಅವರನ್ನು ಕೆಳಗಿಳಿಸಿ, ಅವರ ಕಾರನ್ನು ದುಷ್ಕರ್ಮಿಯೇ ಚಲಾಯಿಸಿಕೊಂಡು ಹೋಗಿರುವ ದೃಶ್ಯವೂ ಸೆರೆಯಾಗಿದೆ. ಈ ಎಲ್ಲ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪಣಂಬೂರು ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ವಿಶೇಷ ತಂಡ ಕಾರ್ಯಾಚರಣೆ ನಡೆಸುತ್ತಿದೆ