Connect with us

    DAKSHINA KANNADA

    ಪ್ರೀತಿಗೆ ಒಲ್ಲೆನೆಂದ ವಿದ್ಯಾರ್ಥಿನಿಗೆ ಚೂರಿ ಇರಿದು ಕೊಲೆ ಯತ್ನ, ಆರೋಪಿಗೆ 18 ವರ್ಷ ಜೈಲಿಗೆ ತಳ್ಳಿದ ಕೋರ್ಟ್..!

    ಮಂಗಳೂರು : ಕಾಲೇಜು ವಿದ್ಯಾರ್ಥಿನಿಗೆ ದೈಹಿಕವಾಗಿ ಹಾಗೂ ಮಾನಸಿಕ ಕಿರುಕುಳದ ಹಿಂಸೆ ನೀಡಿ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಸಿದ್ದ ಆರೋಪಿಗೆ ಸುಶಾಂತ್ ಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯವು ಶುಕ್ರವಾರ 18 ವರ್ಷ 1 ತಿಂಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ಡ್ಯಾನ್ಸ್ ಮಾಸ್ಟರ್ ಆಗಿದ್ದ ನಗರದ ಶಕ್ತಿನಗರ ನಿವಾಸಿ ಆರೋಪಿ ಸುಶಾಂತ್(31) ಕಾರ್ಕಳದ ನಿಟ್ಟೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಸಂತ್ರಸ್ಥೆ ವಿದ್ಯಾರ್ಥಿನಿಗೆ ನಿರಂತರ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ವಿದ್ಯಾರ್ಥಿನಿ ಕಾರ್ಕಳ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದಳು. ಅದರಂತೆ ಪ್ರಕರಣ ದಾಖಲಿಸಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿ ಜೈಲಿನಿಂದ ಜಾಮೀನು ಪಡೆದ ಬಳಿಕ 2019ರ ಜೂನ್ 28ರಂದು ಸಂಜೆ 4:30ಕ್ಕೆ ವಿದ್ಯಾರ್ಥಿನಿಯನ್ನು ಸ್ಕೂಟರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾನೆ.

    ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಹಿಂಬದಿಯ ಶಾಂತಿಧಾಮದ ಬಳಿ ತಡೆದು ನಿಲ್ಲಿಸಿದ ಸುಶಾಂತ್, ವಿದ್ಯಾರ್ಥಿನಿ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿ ಚೂರಿಯಿಂದ ತಿವಿದು ಬಳಿಕ ಚೂರಿಯಿಂದ ತನ್ನ ಕುತ್ತಿಗೆಯನ್ನೇ ತಿವಿದು ಆತ್ಮಹತ್ಯೆಗೆ ಯತ್ನಿಸಿದ್ದ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಜುಲೈ 4ರಂದು ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಎಸ್‌ಐ ಗುರಪ್ಪಕಾಂತಿ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ವಾದ- ಪ್ರತಿವಾದ ಆಲಿಸಿದ ನ್ಯಾಯಾಲಯವು ಆರೋಪಿಗೆ ಶಿಕ್ಷೆ ವಿಧಿಸಿದೆ. ಐಪಿಸಿ ಸೆಕ್ಷನ್ 341ರಡಿ 1 ತಿಂಗಳ ಸಾದಾ ಸಜೆ, ಐಪಿಸಿ ಸೆಕ್ಷನ್ 326ರಡಿ 7 ವರ್ಷಗಳ ಕಠಿಣ ಸಜೆ ಹಾಗೂ 1 ಲಕ್ಷ ರೂ. ದಂಡ, ಐಪಿಸಿ ಸೆಕ್ಷನ್ 307ರಡಿ 10 ವರ್ಷಗಳ ಕಠಿಣ ಸಜೆ, ಐಪಿಸಿ ಸೆಕ್ಷನ್ 354ರಡಿ 1 ವರ್ಷಗಳ ಕಠಿಣ ಸಜೆ ಹಾಗೂ 10,000 ರೂ. ದಂಡ, ದಂಡ ಪಾವತಿಸಲು ವಿಫಲವಾದಲ್ಲಿ 2 ತಿಂಗಳ ಕಠಿಣ ಸಜೆ ಅನುಭವಿಸಲು ನ್ಯಾಯಾಲಯವು ಆರೋಪಿಗೆ ಆದೇಶಿಸಿದೆ. ಆರೋಪಿ ಒಟ್ಟು 18 ವರ್ಷ 1 ತಿಂಗಳು ಅನುಭವಿಸುವಂತೆ ತೀರ್ಪು ನೀಡಿವೆ. ಅಲ್ಲದೆ ದಂಡವನ್ನು ವಿಧಿಸಿದ್ದು, ದಂಡದ ಮೊತ್ತದಲ್ಲಿ 2 ಲಕ್ಷ ರೂ.ವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶೆ ಪ್ರೀತಿ ಕೆ.ಪಿ. ಆದೇಶಿಸಿದ್ದಾರೆ. ಸಂತ್ರಸ್ತೆಯ ಪರವಾಗಿ ಸರಕಾರಿ ಅಭಿಯೋಜಕಿ ಜ್ಯೋತಿ ನಾಯಕ್ ವಾದ ಮಂಡಿಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply