ಮಂಗಳೂರು ಜುಲೈ 06: ಪಣಂಬೂರು ಬೀಚ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುವ ಸಂದರ್ಭದಲ್ಲಿ ಚಾಲಕನ ಬೇಜವಾಬ್ದಾರಿತನ ಹಾಗೂ ಸಾಗಾಟ ಸಂಸ್ಥೆಯ ನಿರ್ಲಕ್ಷ್ಯದಿಂದಾಗಿ ಬೃಹತ್ ಗಾತ್ರದ ಟ್ರೇಲರ್ ವಾಹನವೊಂದು ರಸ್ತೆಗೆ ಅಡ್ಡಲಾಗಿ ಸಿಲುಕಿಕೊಂಡಿದ್ದು, ಭಾನುವಾರ ಸಂಜೆ ಮಂಗಳೂರು-ಸುರತ್ಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಟ್ರಾಫಿಕ್ ಜಾಮ್ ಸಂಭವಿಸಿದೆ.

ಸಾರ್ವಜನಿಕರ ಜೀವಕ್ಕೆ ಅಪಾಯ ತಂದೊಡ್ಡಿ, ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಟ್ರೇಲರ್ ಚಾಲಕ ಹಾಗೂ ಕಂಪನಿ ಅಧಿಕಾರಿಗಳ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಶನಿವಾರವಷ್ಟೇ ಎನ್ಎಂಪಿಟಿ (NMPT) ಬಂದರಿಗೆ ಆಗಮಿಸಿದ್ದ ಈ ಬೃಹತ್ ವಾಹನವು ಸರಕು ಇಳಿಸಿ ಭಾನುವಾರ ಸಂಜೆ ಹೊರಬಂದಿತ್ತು. ಆದರೆ, ಬೀಚ್ ರಸ್ತೆಯಿಂದ ಮುಖ್ಯ ಹೆದ್ದಾರಿಗೆ ಎಂಟ್ರಿ ಕೊಡುವ ಕಡಿದಾದ ತಿರುವಿನಲ್ಲಿ ಚಾಲಕನ ನಿರ್ಲಕ್ಷ್ಯದಿಂದಾಗಿ ಟ್ರೇಲರ್ನ ಮುಂಭಾಗವು ರಸ್ತೆ ಡಿವೈಡರ್ ಮೇಲೇರಿ, ಅಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಈ ಅಪಘಾತದಿಂದಾಗಿ ಟ್ರೇಲರ್ನ ಬೃಹತ್ ಹಿಂಭಾಗವು ಇಡೀ ಹೆದ್ದಾರಿಗೆ ಪೂರ್ತಿಯಾಗಿ ಅಡ್ಡಲಾಗಿ ನಿಂತಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಇದರ ಪರಿಣಾಮವಾಗಿ ಮಂಗಳೂರು ಮತ್ತು ಸುರತ್ಕಲ್ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು, ಸಾರ್ವಜನಿಕರು ಬರೋಬ್ಬರಿ ಎರಡು ಗಂಟೆಗಳ ಕಾಲ ನರಕಯಾತನೆ ಅನುಭವಿಸುವಂತಾಯಿತು.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಈ ಬೃಹತ್ ಟ್ರೇಲರ್ ವಾಹನವು ರಸ್ತೆ ಸಂಚಾರಕ್ಕೆ ಅಗತ್ಯವಿರುವ ಯಾವುದೇ ಕಾನೂನಾತ್ಮಕ ಅನುಮತಿಯನ್ನು (Permission) ಪಡೆದಿರಲಿಲ್ಲ ಹಾಗೂ ಪೊಲೀಸ್ ಇಲಾಖೆಗೆ ಮುನ್ನೆಚ್ಚರಿಕೆ ಮಾಹಿತಿಯನ್ನೂ ನೀಡಿರಲಿಲ್ಲ ಎಂಬುದು ಬಯಲಾಗಿದೆ. ಕಂಪನಿಯು ಕನಿಷ್ಠ ಸುರಕ್ಷತಾ ಕ್ರಮಗಳನ್ನೂ ಕೈಗೊಳ್ಳದೆ ಇಷ್ಟು ದೊಡ್ಡ ಯಂತ್ರೋಪಕರಣವನ್ನು ಸಾಗಿಸುತ್ತಿತ್ತು.
ಈ ಹಿನ್ನೆಲೆಯಲ್ಲಿ ಟ್ರೇಲರ್ ಚಾಲಕ , ‘EXG Express Global Logistics’ ಟ್ರಾನ್ಸ್ಪೋರ್ಟ್ ಕಂಪನಿಯ ಮಾಲೀಕ ಹಾಗೂ ಯಂತ್ರೋಪಕರಣ ಸಾಗಾಟಕ್ಕೆ ಸಂಬಂಧಿಸಿದ ಕಂಪನಿಯ ಅಧಿಕಾರಿಗಳ ವಿರುದ್ಧ ಮಂಗಳೂರು ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. “ಬೃಹತ್ ವಾಹನಗಳ ಸಾಗಾಟದ ಸಂದರ್ಭದಲ್ಲಿ ನಿಯಮಾನುಸಾರ ಅನುಮತಿ ಪಡೆದು, ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸದಿದ್ದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಮಂಗಳೂರು ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.