Connect with us

    LATEST NEWS

    ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಏಪ್ರಿಲ್ 26 ರಂದು ಸಾಮೂಹಿಕ ವಿವಾಹ- ಸಚಿವ ಕೋಟಾ ಶ್ರೀನಿವಾಸ ಪೂಜಾರಿ

    ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಏಪ್ರಿಲ್ 26 ರಂದು ಸಾಮೂಹಿಕ ವಿವಾಹ- ಸಚಿವ ಕೋಟಾ ಶ್ರೀನಿವಾಸ ಪೂಜಾರಿ

    ಉಡುಪಿ ಡಿಸೆಂಬರ್ 05: ಧಾರ್ಮಿಕ ಧತ್ತಿ ಇಲಾಖೆ ವ್ಯಾಪ್ತಿಗೊಳಪಡುವ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಏಪ್ರಿಲ್ 26 ರಂದು ಸಾಮೂಹಿಕ ವಿವಾಹಗಳನ್ನು ನಡೆಸಲಾಗುವುದು ಎಂದು ರಾಜ್ಯದ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
    ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಉಡುಪಿ ಜಿಲ್ಲೆಯ ಎ ವರ್ಗದ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಸುವ ಕುರಿತಂತೆ ವಿವಿಧ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಧಾರ್ಮಿಕ ಧತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ, ಉತ್ತಮ ಆದಾಯವಿರುವ ರಾಜ್ಯದ 110 ದೇವಾಲಯಗಳಲ್ಲಿ 2020 ರ ಏಪ್ರಿಲ್ 26 ರಂದು ಸಾಮೂಹಿಕ ವಿವಾಹ ನಡೆಸಲು ದಿನಾಂಕ ನಿಗಧಿಪಡಿಸಿದ್ದು, ವಿವಾಹವಾಗುವ ದಂಪತಿಗಳಿಗೆ ಎಪಿಎಲ್, ಬಿಪಿಎಲ್ ಎಂಬ ಮಾನದಂಡ ಇಲ್ಲ, ವಿವಾಹವಾಗುವ ವರನಿಗೆ ಪೋತ್ಸಾಹಧನವಾಗಿ (ಹೂವಿನ ಹಾರ, ಪಂಚೆ, ಶರ್ಟ್ ಮತ್ತು ಶಲ್ಯಕ್ಕಾಗಿ) ರೂ.5000.00 ಮತ್ತು ವಧುವಿಗೆ (ಹೂವಿನ ಹಾರ, ಧಾರೆ ಸೀರೆ, ರವಿಕೆ ಕಣಕ್ಕಾಗಿ) 10000.00 ಹಾಗೂ ವಧುವಿಗೆ ಚಿನ್ನದ ತಾಳಿ, ಚಿನ್ನದ ಗುಂಡು (ಅಂದಾಜು 8 ಗ್ರಾಂ ತೂಕ) ಗಾಗಿ 40000.00 ಗಳನ್ನು ನೀಡಲಾಗುವುದು, ಈ ಮೊತ್ತವನ್ನು ವಿವಾಹವಾದ ದಿನವೇ ಸಂಬಂದಪಟ್ಟ ವಧು ವರರ ಖಾತೆಗೆ ಆರ್.ಟಿ.ಜಿ.ಎಸ್ ಮೂಲಕ ಜಮೆ ಮಾಡಲಾಗುವುದು ಹಾಗೂ ವಿವಾಹಕ್ಕೆ ಆಗಮಿಸುವ ವಧು ವರರ ಬಂಧುಗಳಿಗೆ/ಸಾರ್ವಜನಿಕರಿಗೆ ಊಟೋಪಚಾರ ವ್ಯವಸ್ಥೆಯನ್ನು ಹಾಗೂ ಇತರೆ ವ್ಯವಸ್ಥೆಗೆ ತಗಲುವ ವೆಚ್ಚವನ್ನು ದೇವಾಲಯಗಳ ನಿಧಿಯಿಂದ ಭರಿಸಲಾಗುವುದು ಎಂದು ಹೇಳಿದರು.

    ಸಾಮೂಹಿಕ ವಿವಾಹ ನಡೆಯುವ ಕುರಿತಂತೆ ಸಂಬಂದಪಟ್ಟ ಎಲ್ಲಾ ದೇವಾಲಯಗಳ ಆವರಣದಲ್ಲಿ ಮಾಹಿತಿಯನ್ನು ಪ್ರಚುರಪಡಿಸುವಂತೆ ತಿಳಿಸಿದ ಮುಜರಾಯಿ ಸಚಿವರು, 27-3-2020 ವಧು ವರರ ವಿವರಗಳನ್ನು ನೊಂದಾಯಿಸಿಕೊಳ್ಳಲು ಕಡೆಯ ದಿನಾಂಕವಾಗಿದ್ದು, 1-4-2020 ರಂದು ನೊಂದಾಯಿಸಿಕೊಂಡ ವಧು ವರರ ವಿವರಗಳನ್ನು ದೇವಾಲಯಗಳಲ್ಲಿ ಪ್ರಕಟಪಡಿಸಲಾಗುವುದು, 6-4-2020 ವಧು ವರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, 11-4-2020 ರಂದು ಅಂತಿಮ ವಧು ವರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.

    ಸಾಮೂಹಿಕ ವಿವಾಹದಲ್ಲಿ ಮೊದಲ ಬಾರಿಗೆ ವಿವಾಹವಾಗುವವರಿಗೆ ಮಾತ್ರ ಅವಕಾಶವಿದ್ದು, ಎರಡನೇ ಮದುವೆ ಆಗುವವರಿಗೆ ಅವಕಾಶವಿಲ್ಲ, ವಧು ವರರ ನಿಯಮಾನುಸಾರ ಪ್ರಾಪ್ತ ವಯಸ್ಕರಾಗಿದ್ದು, ಈ ಬಗ್ಗೆ ಸರ್ಕಾರದ ಅಧಿಕೃತ ದಾಖಲೆಗಳನ್ನು ನೀಡಬೇಕು. ವಿವಾಹ ನಡೆಯುವ ಸ್ಥಳದಲ್ಲೇ ವಿವಾಹ ನೊಂದಣಾಧಿಕಾರಿಗಳಿಂದ ವಿವಾಹ ನೊಂದಣಿ ನಡೆಯಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಬಾಂಡ್ ವಿತರಣೆ ಸಹ ನೀಡಲಾಗುವುದು , ರಾಜ್ಯದ ಪ್ರಮುಖ ಖಾಸಗಿ ಸಂಸ್ಥೆಗಳು ತಮ್ಮ ನಿಧಿಯಿಂದ ವಧು ವರರಿಗೆ ಉಚಿತ ಉಡುಗೊರೆ ನೀಡುವುದಾದರೆ ಅದಕ್ಕೆ ಅವಕಾಶ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

    ಏಪ್ರಿಲ್ 26 ರಂದು ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ, ಪೇಜಾವರ ಶ್ರೀಗಳು, ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ, ರವಿಶಂಕರ್ ಗುರೂಜಿ, ಇನ್ಫೋಸಿಸ್‍ನ ಸುಧಾಮೂರ್ತಿ, ಪ್ರಮುಖ ವೀರಶೈವ ಮಠಾಧೀಶರು, ಒಕ್ಕಲಿಗ ಗುರುಗಳು ಸೇರಿದಂತೆ ಪ್ರಮುಖ ಧಾರ್ಮಿಕ ಗುರುಗಳು ಈ ವಿವಾಹ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
    ಸಾಮಾಹಿಕ ವಿವಾಹ ಕಾರ್ಯಕ್ರಮದ ಬಗ್ಗೆ ಶೀಘ್ರದಲ್ಲಿಯೇ ಟೋಲ್ ಫ್ರೀ ಸಂಖ್ಯೆಯನ್ನು ನೀಡಲಿದ್ದು, ಬೆಳಗ್ಗೆ 10 ರಿಂದ 6 ಗಂಟೆಯವರೆಗೆ ಸಾರ್ವಜನಿಕರು ಕರೆ ಮಾಡಿ ವಿವಾಹಕ್ಕೆ ನಿಗಧಿಪಡಿಸಿರುವ ಅರ್ಹತೆಗಳು ಮತ್ತಿತರ ಅಗತ್ಯ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಸಚಿವರು ಹೇಳಿದರು.

    ಸಾಮಾಹಿಕ ವಿವಾಹ ಕಾರ್ಯಕ್ರಮದ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿನ ದೇವಾಲಯಗಳಿಗೆ ಸಂಬಂದಪಟ್ಟ ಅಧಿಕಾರಿಗಳು ಮತ್ತು ಸ್ಥಳಿಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸುವುದಾಗಿ ಸಚಿವರು ತಿಳಿಸಿದರು.

    ಸಾಮೂಹಿಕ ವಿವಾಹ ಕಾರ್ಯಕ್ರಮದ ಕುರಿತಂತೆ ರಾಜ್ಯಾದಂತ ಸರ್ಕಾರದ ವಿವಿಧ ಜಾಹೀರಾತು ಫಲಕಗಳಲ್ಲಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ಜಾಹೀರಾತು ಸಿದ್ದಪಡಿಸಿ, ಅಳವಡಿಸುವ ಮೂಲಕ, ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

    ಅನಿವಾರ್ಯ ಕಾರಣಗಳಿಂದ ಏಪ್ರಿಲ್ 26 ರಂದು ಸಾಮೂಹಿಕ ವಿವಾಹ ನಡೆಸಲು ಸಾಧ್ಯವಾಗದ ದೇವಾಲಯಗಳಲ್ಲಿ ಮೇ 24 ರಂದು ವಿವಾಹಗಳನ್ನು ನಡೆಸಲಾಗುವುದು ಎಂದು ತಿಳಿಸಿದರು. ಸಾಮೂಹಿಕ ವಿವಾಹ ಏರ್ಪಡಿಸುವ ಕುರಿತಂತೆ ಸಂಬಂದಪಟ್ಟ ದೇವಾಲಯಗಳು ತಮ್ಮ ವ್ಯಾಪ್ತಿಯ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಮತ್ತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ಸಲಹೆ, ಸೂಚನೆ, ಅಭಿಪ್ರಾಯಗಳನ್ನು ಪಡೆದು ಯಶಸ್ವಿಯಾಗಿ ಕಾರ್ಯಕ್ರಮ ಆಯೋಜಿಸುವಂತೆ ಸಚಿವ ಶ್ರೀನಿವಾಸ ಪೂಜಾರಿ ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply