Connect with us

    LATEST NEWS

    ರಾಹುಲ್ ಗಾಂಧಿ ವಿರುದ್ದ ಪ್ರಚೋಧನಕಾರಿ ಹೇಳಿಕೆ – ಶಾಸಕ ಭರತ್ ಶೆಟ್ಟಿಗೆ ಮಧ್ಯಂತರ ಜಾಮೀನು

    ಬೆಂಗಳೂರು ಜುಲೈ 11 : ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನಡೆದಿದ್ದ ಬಿಜೆಪಿ ಪ್ರತಿಭಟನೆ ವೇಳೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೆನ್ನಗೆ ಭಾರಿಸಬೇಕು ಎಂದು ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ವೈ.ಭರತ್ ಶೆಟ್ಟಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದೆ.

    ಕರ್ನಾಟಕದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭಾರತೀಯ ನಾಗರಿಕ ಸಂಹಿತೆ-2023ರ (ಬಿಎನ್ ಎಸ್) ಅಡಿಯಲ್ಲಿ ಶಾಸಕ ಭರತ್ ಶೆಟ್ಟಿ ಜಾಮೀನು ಪಡೆದ ಮೊದಲ ಆರೋಪಿ ಎನಿಸಿ ಖಾತೆ ತೆರೆದಿದ್ದಾರೆ.
    ಜುಲೈ 8 ರಂದು ನಡೆದಿದ್ದ ಬಿಜೆಪಿ ಯುವಮೋರ್ಚಾ ಪ್ರತಿಭಟನಾ ಸಭೆಯಲ್ಲಿ ಭರತ್ ಶೆಟ್ಟಿ ರಾಹುಲ್ ಗಾಂಧಿಗೆ ಸಂಸತ್ ಒಳಗೆ ಹೋಗಿ ಕೆನ್ನಗೆ ಭಾರಿಸಬೇಕು ಎಂದು ಹೇಳಿದ್ದರು. ಅಲ್ಲದೆ ರಾಹುಲ್ ಗಾಂಧಿ ಬೀದಿ ನಾಯಿಯಾಗಿದ್ದು, ಅದರಷ್ಟೂ ಬುದ್ಧಿ ಆತನಿಗೆ ಇಲ್ಲ. ಬಿಜೆಪಿ ಕಾರ್ಯಕರ್ತರು ಮನಸ್ಸು ಮಾಡಿದರೆ ಕಾಂಗ್ರೆಸ್ ಅನ್ನು ನಾಶ ಮಾಡಲು ಸಿದ್ಧರಿದ್ದೇವೆ ಎಂದಿದ್ದರು. ಈ ಕುರಿತಂತೆ ಮಹಾನಗರ ಪಾಲಿಕೆ ಸದಸ್ಯ ಅನಿಲ್ ಕುಮಾರ್, ಕಾವೂರು ಠಾಣೆಗೆ ದೂರು ನೀಡಿದ್ದರು. ದೂರನ್ನು ಆಧರಿಸಿ, ಭರತ್ ಶೆಟ್ಟಿ ಮತ್ತು ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ-2023ರ ಕಲಂ 351 (3) (ಕ್ರಿಮಿನಲ್ ಬೆದರಿಕೆ), 353 (ಪ್ರಚೋದನೆ) ಅಡಿ ಎಫ್ಐಆರ್ ದಾಖಲಿಸಲಾಗಿತ್ತು.

    ಈ ಸಂಬಂಧ ಭರತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ‘ ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಗುರುವಾರ ವಿಚಾರಣೆ ನಡೆಸಿದರು. ‘ಒಂದು ವೇಳೆ ಭರತ್ ಶೆಟ್ಟಿ ಅವರನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದರೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು. ಭರತ್ ಶೆಟ್ಟಿ ಅವರು ₹1 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್, ಒಬ್ಬರ ಭದ್ರತೆ ಒದಗಿಸಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಮತ್ತು ಸಾಕ್ಷ್ಯ ತಿರುಚಬಾರದು. ತನಿಖಾಧಿಕಾರಿ ವಿಚಾರಣೆಗೆ ಕರೆದಾಗ ಹಾಜರಾಗಬೇಕು‘ ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

     

    ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪ್ರಾಸಿಕ್ಯೂಷನ್ ಪರ ವಕೀಲರಿಗೆ ನಿರ್ದೇಶಿಸಿದ ನ್ಯಾಯಾಲಯ ಇದೇ 16ಕ್ಕೆ ವಿಚಾರಣೆ ಮುಂದೂಡಿದೆ. ಅರ್ಜಿದಾರರ ಪರ ಹೈಕೋರ್ಟ್ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್ ವಾದ ಮಂಡಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply