ಮಂಗಳೂರು ಜುಲೈ 01: ನಗರದ ಕಂಕನಾಡಿ ಸಮೀಪದ ನಾಗುರಿ ಗರೋಡಿಯಲ್ಲಿ ಭಾರೀ ಮಳೆಗೆ ತಡೆಗೋಡೆ ಕುಸಿದು ಇಬ್ಬರು ಮಕ್ಕಳು ಹಾಗೂ ಮಹಿಳೆ ಸಾವನ್ನಪ್ಪಿರುವುದು ಅತ್ಯಂತ ಹೃದಯವಿದ್ರಾವಕ ಘಟನೆಯಾಗಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬುಧವಾರ ದುರಂತ ಸಂಭವಿಸಿದ ಸ್ಥಳಕ್ಕೆ ತಕ್ಷಣವೇ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, “ಮೃತರ ಕುಟುಂಬದವರಿಗೆ ಯಾವುದೇ ರೀತಿಯ ವಿಳಂಬಕ್ಕೆ ಆಸ್ಪದವಿಲ್ಲದಂತೆ ಸೂಕ್ತ ಮತ್ತು ಗರಿಷ್ಠ ಪರಿಹಾರ ಧನ ಲಭಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ತುರ್ತು ಮಾತುಕತೆ ನಡೆಸಿದ್ದೇನೆ. ಇದೊಂದು ಅತ್ಯಂತ ದುರದೃಷ್ಟಕರ ಘಟನೆಯಾಗಿದ್ದು, ಇಡೀ ನಗರವೇ ಕಂಬನಿ ಮಿಡಿಯುವಂತೆ ಮಾಡಿದೆ” ಎಂದರು. ಸ್ಥಳ ಪರಿಶೀಲನೆಯ ನಂತರ ಅವರು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಗಾಯಾಳುಗಳ ಸಂಪೂರ್ಣ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಅವರು ಇದೇ ವೇಳೆ ಒತ್ತಾಯಿಸಿದರು.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಕರಾವಳಿಯಲ್ಲಿ ಮಳೆಯ ಪ್ರಮಾಣ ಇನ್ನು ಕೆಲವು ದಿನಗಳ ಕಾಲ ಮುಂದುವರಿಯಲಿದೆ. ಹೀಗಾಗಿ ನಗರದಲ್ಲಿ ಈಗಾಗಲೇ ಪ್ರಕೃತಿ ವಿಕೋಪಕ್ಕೆ ತುತ್ತಾಗಬಹುದಾದ ಅಪಾಯಕಾರಿ ಪ್ರದೇಶಗಳು ಎಂದು ಗುರುತಿಸಲಾಗಿರುವ ಜಾಗಗಳಲ್ಲಿ ವಾಸಿಸುತ್ತಿರುವ ಜನರ ರಕ್ಷಣೆಗೆ ಜಿಲ್ಲಾಡಳಿತವು ತಕ್ಷಣವೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸುರಕ್ಷಿತ ಸ್ಥಳಗಳಿಗೆ ಜನರನ್ನು ಸ್ಥಳಾಂತರಿಸಬೇಕು” ಎಂದು ಶಾಸಕರು ಆಗ್ರಹಿಸಿದರು. ಇದರೊಂದಿಗೆ ಸಾರ್ವಜನಿಕರೂ ಕೂಡ ಮಳೆಗಾಲದಲ್ಲಿ ಅತ್ಯಂತ ಎಚ್ಚರಿಕೆ ವಹಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.