LATEST NEWS
ಜೂನ್ 5ಕ್ಕೆ ಕರಾವಳಿಗೆ ಮುಂಗಾರು ಪ್ರವೇಶ – ಹವಮಾನ ಇಲಾಖೆ

ಮಂಗಳೂರು ಮೇ 28: ಅಸಾನಿ ಚಂಡಮಾರುತದಿಂದಾಗಿ ವಿಳಂಬಗೊಂಡಿದ್ದ ಮುಂಗಾರು ಮಳೆ ಜೂನ್ 5 ರಂದು ರಾಜ್ಯಕ್ಕೆ ಪ್ರವೇಶಿಸಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ಕೇರಳಕ್ಕೆ ಇನ್ನೆರಡು ದಿನಗಳಲ್ಲಿ ಮುಂಗಾರು ಪ್ರವೇಶವಾಗಲಿದ್ದು, ಬಳಿಕ ಜೂನ್ 5 ರಿಂದ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಲಿದೆ. ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು ಮತ್ತು ಇಡೀ ಮಾಲ್ಡೀವ್ಸ್ ಮತ್ತು ಲಕ್ಷದ್ವೀಪದ ಪಕ್ಕದ ಪ್ರದೇಶಗಳು ಹಾಗೂ ಕೊಮೊರಿನ್ನ ಕೆಲವೆಡೆ ನೈಋತ್ಯ ಮುಂಗಾರು ಮತ್ತಷ್ಟು ಪ್ರವೇಶ ಪಡೆಯುವ ನಿರೀಕ್ಷೆ ಇದೆ. ಅದೇ ರೀತಿಯಾಗಿ ಈ ವಾರದಲ್ಲಿ ಕೇರಳದಲ್ಲಿ ಮಾನ್ಸೂನ್ ಆರಂಭವಾಗಲು ಪೂರಕವಾದ ವಾತಾವರಣವಿದೆ ಎಂದು ಹೇಳಿದೆ.

ಅಸನಿ ಚಂಡಮಾರುತದ ಪ್ರಭಾವದಿಂದಾಗಿ ಈ ಬಾರಿ ವಾಡಿಕೆಗಿಂತ ಮೊದಲೇ ಅಂದರೆ ಮೇ 16ಕ್ಕೆ ಅಂಡಮಾನ್ ಅನ್ನು ಮುಂಗಾರು ತಲುಪಿತ್ತು. ಆದರೆ, ಆರು ದಿನಗಳ ವಿರಾಮದ ಬಳಿಕ ಈಗ ಶ್ರೀಲಂಕಾದಿಂದ ಕೇರಳದ ಕಡೆಗೆ ಚಲಿಸಲು ಪ್ರಾರಂಭಿಸಿದೆ. ಕೇರಳಕ್ಕೆ ಆಗಮಿಸುವುದು ಮಾತ್ರವೇ ಬಾಕಿ ಇದೆ ಎನ್ನಲಾಗಿದೆ. ಮಾನ್ಸೂನ್ ಜೂನ್ 1 ರಂದು ಕೇರಳ ರಾಜ್ಯವನ್ನು ಪ್ರವೇಸಿಸಿದರೆ, ಜೂನ್ 5 ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲ ಭಾಗಗಳನ್ನು ಮುಟ್ಟಲಿದೆ. ಜೂನ್ 10 ರ ವೇಳೆಗೆ ಅದು ಇಡೀ ರಾಜ್ಯವನ್ನು ಆವರಿಸುತ್ತದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಅಧಿಕಾರಿಗಳು ತಿಳಿಸಿದ್ದಾರೆ.