ಮೂಡುಬಿದಿರೆ ಅಗಸ್ಟ್ 01: ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಣಿಲ್ ಎಂಬಲ್ಲಿ ಯುವಕನೋರ್ವ ತನ್ನ ಅಕ್ಕನಿಗೆ ವೀಡಿಯೊ ಕರೆ (Video Call) ಮಾಡಿ ಮಾತನಾಡುತ್ತಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮುಂಜಾನೆ ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ಕಾಜೂರು ಮೂಲದ ಅಬುಸಾಲಿ ಇಸ್ಮಾಯಿಲ್ ಎಂಬವರ ಪುತ್ರ ಸಯ್ಯದ್ ಅನ್ವರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ.
ಕಳೆದ ಕೆಲವು ಸಮಯದಿಂದ ಬೆಳುವಾಯಿಯ ಬಾಡಿಗೆ ಮನೆಯಲ್ಲಿ ಪತ್ನಿ ಹಾಗೂ ಎರಡು ವರ್ಷದ ಮಗುವಿನೊಂದಿಗೆ ವಾಸವಾಗಿದ್ದ ಅನ್ವರ್, ಮೀನಿನ ಟೆಂಪೋ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಕಳೆದ ಕೆಲವು ದಿನಗಳಿಂದ ಕೆಲಸವಿಲ್ಲದೆ ಮನೆಯಲ್ಲಿದ್ದ ಇವರು ಕುಟುಂಬ ಕಲಹದಿಂದ ಬಳಲುತ್ತಿದ್ದರು. ಪತಿ-ಪತ್ನಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿದ್ದು, ಈ ಕುರಿತು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು ಎನ್ನಲಾಗಿದೆ.
ಗುರುವಾರ ಮತ್ತೆ ದಂಪತಿ ನಡುವೆ ಜಗಳವಾಗಿದ್ದರಿಂದ ಪತ್ನಿ ತನ್ನ ಮಗುವಿನೊಂದಿಗೆ ತವರು ಮನೆಗೆ ತೆರಳಿದ್ದರು. ಇದರಿಂದ ಮನನೊಂದ ಅನ್ವರ್, ಅಕ್ಕನಿಗೆ ವೀಡಿಯೊ ಕರೆ ಮಾಡಿ ‘ಪತ್ನಿ ಕಡೆಯವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಹೇಳಿ ಕೃತ್ಯ ಎಸಗಿದ್ದಾನೆ. ಆತಂಕಗೊಂಡ ಸಂಬಂಧಿಕರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಅನ್ವರ್ ಮೃತಪಟ್ಟಿದ್ದರು. ಘಟನೆ ಸಂಬಂಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.