LATEST NEWS
ವಿದೇಶ ಪ್ರವಾಸ ಅರ್ಧಕ್ಕೆ ಮೊಟಕುಗೊಳಿಸಿ ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದ ಸಂಸದ ಕ್ಯಾ. ಚೌಟ

ಮಂಗಳೂರು ಮೇ 03 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕುವೈಟ್ ಭೇಟಿ ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿ ಬಂದಿದ್ದು, ಇಂದು ಮಂಗಳೂರಿಗೆ ಆಗಮಿಸಿದ ಕೂಡಲೇ ದುಷ್ಕರ್ಮಿಗಳಿಂದ ಬಲಿಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಕಾರಿಂಜದಲ್ಲಿರುವ ಮನೆಗೆ ಭೇಟಿ ನೀಡಿ ಮಗನನ್ನು ಕಳೆದುಕೊಂಡು ದುಃಖದಲ್ಲಿರುವ ಕುಟುಂಬಸ್ಥರಿಗೆ ಸಾಂತ್ವನ ಹೇಳುವ ಜತೆಗೆ ಧೈರ್ಯ ತುಂಬಿದ್ದಾರೆ.
ಹಿಂದೂಗಳ ಪರ ಹೋರಾಟ ಮಾಡುತ್ತಿದ್ದ ಸುಹಾಸ್ ಶೆಟ್ಟಿಯನ್ನು ಮತೀಯವಾದಿಗಳು ಬರ್ಬರವಾಗಿ ಹತ್ಯೆ ಮಾಡಿರುವುದಕ್ಕೆ ತೀವ್ರ ನೋವು ಹಾಗೂ ಆಕ್ರೋಶ ವ್ಯಕ್ತಪಡಿಸಿರುವ ಕ್ಯಾ. ಚೌಟ ಅವರು, ಸುಹಾಸ್ ಶೆಟ್ಟಿ ಅವರ ತಂದೆ-ತಾಯಿ ಹಾಗೂ ಕುಟುಂಬಸ್ಥರ ಜತೆಗೆ ಘಟನೆಗೆ ಸಂಬಂಧಿಸಿದಂತೆ ಮಾತನಾಡಿ ಮಾಹಿತಿ ಪಡೆದುಕೊಂಡರು. ಅಲ್ಲದೆ, ಘಟನೆ ನಡೆದ ಸಂದರ್ಭದಲ್ಲಿ ವಿದೇಶದಲ್ಲಿದ್ದ ಕಾರಣ ತುರ್ತಾಗಿ ದೌಡಾಯಿಸಿ ಕುಟುಂಬಸ್ಥರ ದುಃಖದಲ್ಲಿ ಭಾಗಿಯಾಗಿ ನೊಂದವರಿಗೆ ಧೈರ್ಯ ತುಂಬಲು ಹಾಗೂ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗದಿರುವುದಕ್ಕೆ ಅತೀವ ವಿಷಾದ ವ್ಯಕ್ತಪಡಿಸಿದ್ದಾರೆ.

ಮಗನನ್ನು ಕಳೆದುಕೊಂಡು ತೀವ್ರ ನೋವಿನಲ್ಲಿರುವ ಸುಹಾಸ್ ಕುಟುಂಬಕ್ಕೆ ನ್ಯಾಯ ಕೊಡಿಸುವುದಕ್ಕೆ ಎಲ್ಲ ರೀತಿಯ ಸಹಾಯ, ಬೆಂಬಲ ನೀಡಲಾಗುವುದು. ಮನೆಗೆ ಆಧಾರಸ್ತಂಭವಾಗಿದ್ದ ಸುಹಾಸ್ ಸಾವಿನಿಂದ ಅವರ ಕುಟುಂಬ ದಿಕ್ಕು ತೋಚದ ಸ್ಥಿತಿಯಲ್ಲಿದೆ. ತಾಯಿ ಕೂಡ ಅನಾರೋಗಕ್ಕೆ ಒಳಗಾಗಿದ್ದು, ಸೂಕ್ತ ಆರ್ಥಿಕ ಬೆಂಬಲದ ಅಗತ್ಯವಿದೆ. ಹೀಗಿರುವಾಗ, ಸರ್ಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಪರಿಹಾರವನ್ನು ನೀಡಬೇಕು. ಅಲ್ಲದೆ, ಈ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒತ್ತಡ ಹೇರುವ ಮೂಲಕ ಸುಹಾಸ್ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಟ್ಟದಲ್ಲಿಯೂ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುವುದಾಗಿ ಸಂಸದರು ಇದೇ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.