ಮಂಗಳೂರು, ಸೆಪ್ಟೆಂಬರ್ 03 : ಭಾರತೀಯ ಜನತಾ ಪಾರ್ಟಿಯ ಯುವಮೋರ್ಚಾ ಘಟಕ ಸೆಪ್ಟೆಂಬರ್ 7 ರಂದು ಆಯೋಜಿಸಿರುವ ಮಂಗಳೂರು ಚಲೋ ಬೈಕ್ ರಾಲಿ ಮಾಡಿಯೇ ತೀರುತ್ತೇವೆ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಬಿಜೆಪಿ ಯುವಮೋರ್ಚಾ ಆಯೋಜಿಸಿದ್ದ ಮಂಗಳೂರು ಚಲೋ ರಾಲಿಯನ್ನು ಸಿದ್ದರಾಮಯ್ಯ ಸರ್ಕಾರ ವ್ಯವಸ್ಥಿತವಾಗಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ ಅವರು ಹಿಟ್ಲರ್ ತರ ವರ್ತಿಸುತ್ತಿದ್ದು ಹಿಂಬಾಗಿಲಿನ ಮೂಲಕ ತುರ್ತು ಪರಿಸ್ಥಿತಿ ಘೋಷಣೆ ಮಾಡಲು ಹೊರಟಿದೆ ಎಂದು ಆರೋಪಿಸಿದರು.
ರಾಜ್ಯದ ವಿವಿಧ ಕಡೆಗಳಿಂದ ಬರುವ ಈ ಬೈಕ್ ಜಾಥಾಕ್ಕೆ ಈಗಾಗಲೇ 10,000ಕ್ಕೂ ಅಧಿಕ ಕಾರ್ಯಕರ್ತರು ನೋಂದಣಿ ಮಾಡಿಕೊಂಡಿದ್ದಾರೆ. ಈಗಾಗಲೇ ಸಿದ್ದತೆಗಳು ಬಹುತೇಕ ಪೂರ್ಣಗೊಂಡಿವೆ. ಆದರೆ ಸರ್ಕಾರ ಪೋಲಿಸ್ ಇಲಾಖೆಯ ಮೂಲಕ ಇದನ್ನು ವ್ಯವಸ್ಥಿತವಾಗಿ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಬೈಕುಗಳಲ್ಲಿ ಬರುವ ಕಾರ್ಯಕರ್ತರನ್ನು ಉಳಕೊಳ್ಳಲಿಕ್ಕೆ ಈಗಾಗಲೇ ಕಾಯ್ದಿರಿಸಿದ ಸಭಾಂಗಣಗಳನ್ನು ಉಳಕೊಳ್ಳಲಿಕ್ಕೆ ಕೊಡದಂತೆ ಸಭಾಂಗಣಗಳ ಆಡಳಿತಮಂಡಳಿಗಳನ್ನು ಪೋಲಿಸ್ ಇಲಾಖೆಯ ಮುಖಾಂತರ ನೋಟಿಸ್ ನೀಡಿ ಹೆದರಿಸುವ ಬೆದರಿಸುವ ಕಾರ್ಯ ಮಾಡುತ್ತಿದೆ. ಆದರೆ ಯಾವುದೇ ಕಾರಣಕ್ಕೂ ಬೈಕ್ ಜಾಥಾದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಪಡಿಸಿದರು.
ಬೈಕ್ ಜಾಥಾದಲ್ಲಿ ಆಗಮಿಸುವ ಕಾರ್ಯಕರ್ತರನ್ನು ಉಳಿದುಕೊಳ್ಳಲು ಸಭಾಂಗಣಗಳು ದೊರೆಯದ ಪಕ್ಷ ಬದಲಿ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದು, ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ಉಳಕೊಳ್ಳುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು. ಒಂದು ವೇಳೆ ರಾಜ್ಯ ಸರ್ಕಾರ ಬಲ ಪ್ರಯೋಗ ಮಾಡಿ ರಾಲಿಯನ್ನು ಹತ್ತಿಕ್ಕಲು ನೋಡಿದರೆ ಸಿದ್ದರಾಮಯ್ಯ ಅವರೇ ನೇರಾ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದರು. ಪ್ರತಿಭಟನೆಗಳು ಮಾಡುವುದು ಪ್ರಜಾಪ್ರಭುತ್ವದ ಹಕ್ಕು ಅದಕ್ಕೆ ರಕ್ಷಣೆ ನೀಡುವುದು ಸರ್ಕಾರದ ಜವಾಬ್ದಾರಿ ಎಂದರು. ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಈಶ್ವರಪ್ಪ,ಶೋಭಾ ಕರಂದ್ಲಾಜೆ, ಯುವ ಮೋರ್ಚಾದ ರಾಜ್ಯಾಧ್ಯಕ್ಷ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಟಂದೂರು, ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ , ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್, ಮೋನಪ್ಪ ಭಂಡಾರಿ ಸಹಿತ ಮತ್ತಿತರ ನಾಯಕರು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
ಸಂಸದ ಕಟೀಲ್ pressmeet ವಿಡಿಯೋ..