ಬೆಂಗಳೂರು ಜೂನ್ 23: ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮೂಲಕ ಸದಾ ಸುದ್ದಿಯಲ್ಲಿರುವ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ನಿವೇದಿತಾ ಗೌಡ ಹಾಗೂ ಡ್ಯಾನ್ಸರ್ ಕಿಶನ್ ಬಿಳಗಲಿ ಅವರಿಗೆ ಇದೀಗ ಹೊಸ ಕಾನೂನು ಸಂಕಷ್ಟ ಎದುರಾಗಿದೆ. ರೀಲ್ಸ್ ಚಿತ್ರೀಕರಣದ ವೇಳೆ ರಾಷ್ಟ್ರಪಕ್ಷಿ ನವಿಲಿನ ನೈಜ ಗರಿಗಳಿಂದ ಸಿದ್ಧಪಡಿಸಲಾದ ಉಡುಪು ಧರಿಸಿದ ಆರೋಪದ ಮೇಲೆ ಇಬ್ಬರ ವಿರುದ್ಧ ಅರಣ್ಯ ಇಲಾಖೆಗೆ ಅಧಿಕೃತ ದೂರು ಸಲ್ಲಿಕೆಯಾಗಿದೆ.

ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಅವರು ಬೆಂಗಳೂರು ಪ್ರಾದೇಶಿಕ ನಗರ ವಿಭಾಗ ವ್ಯಾಪ್ತಿಯ ಕಗ್ಗಲಿಪುರ ಅರಣ್ಯ ವಲಯ ಅಧಿಕಾರಿಗಳಿಗೆ ಈ ಸಂಬಂಧ ಲಿಖಿತ ದೂರು ನೀಡಿದ್ದು, ಸೆಲೆಬ್ರಿಟಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

ಇತ್ತೀಚೆಗೆ ನಿವೇದಿತಾ ಗೌಡ ಹಾಗೂ ಕಿಶನ್ ಅವರು ನೈಜ ನವಿಲು ಗರಿಗಳನ್ನು ಯಥೇಚ್ಛವಾಗಿ ಬಳಸಿ ವಿನ್ಯಾಸಗೊಳಿಸಲಾಗಿದ್ದ ಉಡುಪುಗಳನ್ನು ಧರಿಸಿ, ‘ಹೇ ನವಿಲೇ ನವಿಲೇ…’ ಎಂಬ ಜನಪ್ರಿಯ ಚಿತ್ರಗೀತೆಗೆ ಹೆಜ್ಜೆ ಹಾಕಿ ರೀಲ್ಸ್ ಮಾಡಿದ್ದರು. ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. “ನಮ್ಮ ರಾಷ್ಟ್ರಪಕ್ಷಿಯ ನೈಜ ಗರಿಗಳನ್ನು ವಾಣಿಜ್ಯ ಹಾಗೂ ಮನೋರಂಜನಾ ಉದ್ದೇಶಗಳಿಗಾಗಿ ಬಳಸಿ ಉಡುಪು ತಯಾರಿಸಿ, ಸಾರ್ವಜನಿಕವಾಗಿ ಪ್ರದರ್ಶಿಸಿರುವುದು ವನ್ಯಜೀವಿ (ಸಂರಕ್ಷಣಾ) ಕಾಯ್ದೆ 1972ರ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ದಿನೇಶ್ ಕಲ್ಲಹಳ್ಳಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಕರಣದ ತೀವ್ರತೆಯನ್ನು ಗಣನೆಗೆ ತೆಗೆದುಕೊಂಡು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡಲೇ ಪ್ರಕರಣ ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಲು ಕಗ್ಗಲಿಪುರ ವಲಯ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ಅಲ್ಲದೆ, ಆರೋಪಿಗಳು ಸೆಲೆಬ್ರಿಟಿಗಳಾಗಿರುವುದರಿಂದ ತನಿಖೆಯ ಅವಧಿಯಲ್ಲಿ ಯಾವುದೇ ರೀತಿಯ ರಾಜಕೀಯ ಪ್ರಭಾವ ಅಥವಾ ಬಾಹ್ಯ ಹಸ್ತಕ್ಷೇಪಕ್ಕೆ ಅವಕಾಶ ನೀಡದೆ ಪಾರದರ್ಶಕವಾಗಿ ಕಠಿಣ ಕ್ರಮ ಜರುಗಿಸಬೇಕು ಎಂದು ದಿನೇಶ್ ಕಲ್ಲಹಳ್ಳಿ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿರುವ ಈ ಪ್ರಕರಣ ಇದೀಗ ರೀಲ್ಸ್ ಪ್ರಿಯರಲ್ಲಿ ಆತಂಕ ಮೂಡಿಸಿದೆ.