ರಾಯಚೂರು, ಮಾರ್ಚ್ 27: ಸ್ನಾನಕ್ಕಾಗಿ ನದಿಗೆ ಇಳಿದ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಆಂಧ್ರಪ್ರದೇಶದ ಕೊಸಗಿ ಮಂಡಲದ ಕಂದಕೂರು ಸಮೀಪ ತುಂಗಭದ್ರಾ ನದಿಯಲ್ಲಿ ಸಂಭವಿಸಿದೆ.

ಮೃತರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ನಿವಾಸಿಗಳಾದ ದಾಸರಿ ಉಮಾವತಿ (35), ದಾಸರಿ ರತ್ನಮ್ಮ (26), ಮಹೇಶ್ (24) ಮತ್ತು ಶಿವಾನಂದ (28) ಎಂದು ಗುರುತಿಸಲಾಗಿದೆ. ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ಇವರು ಮಧ್ಯಾಹ್ನ ವೇಳೆ ತುಂಗಭದ್ರಾ ನದಿಗೆ ಸ್ನಾನಕ್ಕಾಗಿ ಇಳಿದಿದ್ದಾರೆ. ಈ ವೇಳೆ ನದಿಯ ಆಳ ಮತ್ತು ಪ್ರವಾಹದ ತೀವ್ರತೆಯನ್ನು ಅಂದಾಜಿಸಲು ಸಾಧ್ಯವಾಗದೇ, ನಾಲ್ವರೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ದುರ್ಘಟನೆ ಆಂಧ್ರಪ್ರದೇಶ–ಕರ್ನಾಟಕ ಗಡಿ ಭಾಗದಲ್ಲಿರುವ ರಾಜೋಳ್ಳಿಬಂಡಾ ಆಣೆಕಟ್ಟಿನ ಕೊನೆಯ ಭಾಗದ ಬಳಿ ನಡೆದಿದೆ. ಪ್ರಕರಣವು ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಕೊಸಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸ್ಥಳೀಯ ಮೀನುಗಾರರ ಸಹಾಯದಿಂದ ಮೃತದೇಹಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಕೊಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಕುರ್ಡಿ ಗ್ರಾಮದಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.