Connect with us

    LATEST NEWS

    ಪೆರ್ಡೂರು ಅನಂತ ಪದ್ಮನಾಭ ದೇವಸ್ಥಾನ ಈಗಿರುವ ಜಾಗದಲ್ಲೇ ಉಳಿಸಬಹುದೇ ಹೇಗೆ – ಹೈಕೋರ್ಟ್ ಪ್ರಶ್ನೆ

    ಬೆಂಗಳೂರು ಎಪ್ರಿಲ್ 06 : ಉಡುಪಿ ಜಿಲ್ಲೆಯ ಪೆರ್ಡೂರಿನ ಅನಂತ ಪದ್ಮನಾಭ ದೇವಸ್ಥಾನವನ್ನು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ವೇಳೆ ಯಾವುದೇ ರೀತಿಯ ಮೂಲ ಸ್ವರೂಪ ಕಳೆದುಕೊಳ್ಳದ ರೀತಿಯಲ್ಲಿ ಈಗಿರುವ ಜಾಗದಲ್ಲೇ ಉಳಿಸಬಹುದೇ ಹೇಗೆ ಎಂಬ ಬಗ್ಗೆ ಸ್ಪಷ್ಟಪಡಿಸಿ’ ಎಂದು ಹೈಕೋರ್ಟ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಸೂಚಿಸಿದೆ.


    ಈ ಸಂಬಂಧ ಪೆರ್ಡೂರಿನ ರಂಜಿತ್ ಕುಮಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
    ಪೆರ್ಡೂರಿನ ಐತಿಹಾಸಿಕ ಹಾಗೂ ಪ್ರಾಚೀನ ಅನಂತ ಪದ್ಮನಾಭ ದೇವಾಲಯ, ರಥಬೀದಿ ಹಾಗೂ ನಾಗವನ ಜಾಗದಲ್ಲಿಯೇ ಅಗಲೀಕರಣ ಕಾರ್ಯ ನಡೆಯಲಿದೆ. ಈ ಕುರಿತ ಭೂ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದ್ದಾಗಲೇ ದೇವಾಲಯದ ಭಕ್ತರು ಆಕ್ಷೇಪ ವ್ಯಕ್ತಪಡಿಸಿ 2022 ರ ಡಿಸೆಂಬರ್​ 19 ರಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಆದರೆ, ಆ ಮನವಿಯನ್ನು ಪರಿಗಣಿಸಿಲ್ಲ. ರಸ್ತೆ ಅಗಲೀಕರಣವನ್ನು ಹೆದ್ದಾರಿ ಪ್ರಾಧಿಕಾರ ಹೊರಡಿಸಿರುವ ಮಾರ್ಗಸೂಚಿಗಳಿಗೆ ವಿರುದ್ಧವಾಗಿ ಕೈಗೆತ್ತಿಕೊಳ್ಳಲಾಗಿದೆ. ಆದ್ದರಿಂದ ಹೆದ್ದಾರಿ ಅಗಲೀಕರಣಕ್ಕೆ ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಬೇಕು” ಎಂದು ಕೋರಿದರು.

    ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪಿಠ, ‘ರಸ್ತೆ ವಿಸ್ತರಣೆ ಸಂದರ್ಭಗಳಲ್ಲಿ ದೇವಾಲಯಗಳೂ ಸೇರಿದಂತೆ ಯಾವುದೇ ಧಾರ್ಮಿಕ ಕಟ್ಟಡಗಳಿಗೆ ಧಕ್ಕೆ ಆಗುವುದಾದರೆ ಅಂತಹ ಸಂದರ್ಭಗಳಲ್ಲಿ ಸಂಬಂಧಿಸಿದ ಪ್ರಾಧಿಕಾರ ಪರ್ಯಾಯ ಮಾರ್ಗಗಳನ್ನು ಬಳಸಬಹುದು. ಈ ಬಗ್ಗೆ ಸುಪ್ರೀಂ ಕೋರ್ಟ್ ಕೂಡಾ ತೀರ್ಪು ನೀಡಿದೆ. ಹಾಗಾಗಿ ಈ ಪ್ರಕರಣದಲ್ಲೂ ಸಚಿವಾಲಯ ಪರ್ಯಾಯ ಮಾರ್ಗದ ಬಗ್ಗೆ ಆಲೋಚಿಸಬೇಕು’ ಎಂದು ಕೇಂದ್ರ ಸಚಿವಾಲಯದ ಪರ ಹಾಜರಿದ್ದ ವಕೀಲ ಎಸ್‌.ರಾಜಶೇಖರ್‌ ಅವರಿಗೆ ಸೂಚಿಸಿತು.

    ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷ, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರೂ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಮೇ 30ಕ್ಕೆ ಮುಂದೂಡಿತು.

    Share Information
    Advertisement
    Click to comment

    You must be logged in to post a comment Login

    Leave a Reply