ಧಾರವಾಡ,ಮಾರ್ಚ್ 31 : ಪೆಟ್ರೋಲ್ ಅಭಾವದ ವದಂತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಪೆಟ್ರೋಲ್ ಕ್ಯಾನ್ ಸ್ಫೋಟಗೊಂಡು, ಗೃಹಿಣಿಯೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಜಿಲ್ಲೆಯ ತಡಕೋಡ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ತಡಕೋಡ ಗ್ರಾಮದ ಹರಿಜನಕೇರಿ ಓಣಿಯಲ್ಲಿ ಸೋಮವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಪೂರ್ಣಿಮಾ ಕಲ್ಲಪ್ಪ ಹಾದಿಮನಿ (32) ಎಂಬುವವರ ಸ್ಥಿತಿ ಚಿಂತಾಜನಕವಾಗಿದ್ದು, ದೇಹದ ಶೇ. 80 ರಷ್ಟು ಭಾಗ ಸುಟ್ಟು ಹೋಗಿದೆ. ಮದುವೆ ಸಮಾರಂಭಗಳಲ್ಲಿ ರಥ ಓಡಿಸುವ ಸಲುವಾಗಿ ಈ ಕುಟುಂಬವು ಪೆಟ್ರೋಲ್ ಸಂಗ್ರಹಿಸಿ ಫ್ರಿಡ್ಜ್ ಬಳಿ ಇಟ್ಟಿತ್ತು. ಪೂರ್ಣಿಮಾ ಅವರು ಅಡುಗೆ ಕೆಲಸದಲ್ಲಿದ್ದಾಗ ಆಕಸ್ಮಿಕವಾಗಿ ಕ್ಯಾನ್ಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಮನೆಗೆ ಜ್ವಾಲೆ ಆವರಿಸಿದೆ.
ಬೆಂಕಿಯ ಕೆನ್ನಾಲಿಗೆಯ ನಡುವೆ ಸಿಲುಕಿದ್ದ ಅತ್ತಿಗೆಯನ್ನು ಕಾಪಾಡಲು ಮೈದುನ ಯಲ್ಲಪ್ಪ ಅವರು ಪ್ರಾಣದ ಹಂಗು ತೊರೆದು ಮುಂದಾಗಿದ್ದಾರೆ. ಈ ರಕ್ಷಣಾ ಕಾರ್ಯದಲ್ಲಿ ಅವರಿಗೂ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ವೇಳೆ ಮನೆಯ ಉಳಿದ ಸದಸ್ಯರು ಹೊರಗಡೆ ಇದ್ದಿದ್ದರಿಂದ ದೊಡ್ಡ ಮಟ್ಟದ ಜೀವಹಾನಿ ತಪ್ಪಿದಂತಾಗಿದೆ. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಗಂಭೀರವಾಗಿ ಗಾಯಗೊಂಡಿರುವ ಪೂರ್ಣಿಮಾ ಅವರಿಗೆ ಮೊದಲು ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಆದರೆ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಮಹಜರು ನಡೆಸಿ ತನಿಖೆ ಮುಂದುವರಿಸಿದ್ದಾರೆ.