ನವದೆಹಲಿ, ಆಗಸ್ಟ್ 15: ಮಣಿಪುರದ ಜನತೆ ಶಾಂತಿ ಕಾಪಾಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ‘ಇಡೀ ದೇಶ ಮಣಿಪುರದ ಜನರ ಜತೆಗಿದೆ. ಶಾಂತಿಯಿಂದ ಮಾತ್ರ ಪರಿಹಾರ ಸಾಧ್ಯ. ಪರಿಹಾರ ಕಂಡುಕೊಳ್ಳಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ’ ಎಂದು ಅವರು ನುಡಿದರು.
‘2014ರಲ್ಲಿ ನಾವು ಅಧಿಕಾರಕ್ಕೆ ಬಂದಾಗ ಭಾರತ ಜಾಗತಿ ಆರ್ಥಿಕ ವ್ಯವಸ್ಥೆಯಲ್ಲಿ 10ನೇ ಸ್ಥಾನದಲ್ಲಿತ್ತು. ಇಂದು 140 ಕೋಟಿ ಭಾರತೀಯ ಪ್ರಯತ್ನದಿಂದಾಗಿ ನಾವು ಐದನೇ ಸ್ಥಾನಕ್ಕೆ ಏರಿದ್ದೇವೆ. ಇದು ಹಾಗೆ ಸುಮ್ಮನೆ ನಡೆದಿಲ್ಲ.
ದೇಶವನ್ನು ತನ್ನ ಕಪಿಮುಷ್ಠಿಯಲ್ಲಿ ಹಿಡಿದಿದ್ದ ಭ್ರಷ್ಟಾಚಾರವನ್ನು ನಾವು ನಿಲ್ಲಿಸಿದ್ದೇವೆ ಮತ್ತು ಬಲವಾದ ಆರ್ಥಿಕತೆಯನ್ನು ರಚಿಸಿದ್ದೇವೆ’ ಎಂದು ಪ್ರಧಾನಿ ಮೋದಿ ಹೇಳಿದರು. ಸುಧಾರಣೆ, ಸಾಧನೆ ಮತ್ತು ಪರಿವರ್ತನೆ ದೇಶವನ್ನು ಬದಲಾಯಿಸುತ್ತಿವೆ ಎಂದು ಪ್ರಧಾನಿ ನುಡಿದರು.