ಮಂಗಳೂರು ಜೂನ್ 20: ಹತ್ಯೆಗಳಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ಪೊಲೀಸ್ ವ್ಯವಸ್ಥೆ ಸುಧಾರಣೆಗೆ ಆದ್ಯತೆ ನೀಡಲಾಗಿದೆ. ಹಲವು ವರ್ಷಗಳಿಂದ ಒಂದೇ ಠಾಣೆಯಲ್ಲಿ ತಳ ಉರಿದ್ದ ಕೆಳ ಹಂತದ ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗುತ್ತಿದೆ. ಈವರಗೆ 100ಕ್ಕೂ ಅಧಿಕ ಮಂದಿ ಸಿಬ್ಬಂದಿಗಳನ್ನು ಬೇರೆ ಬೇರೆ ಪೊಲೀಸ್ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿದೆ.

ದಕ್ಷಿಣಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ಅರುಣ್ ಕೆ ಇದೀಗ ಜಿಲ್ಲೆ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ರಿಪೇರಿಯಲ್ಲಿ ತೊಡಗಿದ್ದಾರೆ. ಜಿಲ್ಲೆಯ ವ್ಯಾಪ್ತಿಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಹಲವು ವರ್ಷಗಳಿಂದ ಠಿಕಾಣಿ ಹೂಡಿರುವ ಪೊಲೀಸ್ ಸಿಬ್ಬಂದಿಗಳಿಗೆ ವರ್ಗಾವಣೆ ಬಿಸಿ ಮುಟ್ಟಿಸಿದ್ದಾರೆ.
ಜಿಲ್ಲೆಯ ಬೇರೆ ಬೇರೆ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಒಟ್ಟು ಏಳು ಮಂದಿ ಎಎಸ್ಐ, 31 ಮಂದಿ ಹೆಡ್ ಕಾನ್ಸ್ಟೆಬಲ್ಗಳು ಹಾಗೂ78 ಮಂದಿ ಕಾನ್ಸ್ಟೆಬಲ್ಗಳನ್ನು ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಿಗೆ ಜೂನ್ 10ರಂದು ವರ್ಗಾವಣೆ ಮಾಡಲಾಗಿದೆ. ಆಡಳಿತಾತ್ಮಕ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್ಪಿ ಕಚೇರಿಯ ಮೂಲಗಳು ತಿಳಿಸಿವೆ.
ಕೆಲವು ಪೊಲೀಸ್ ಅಧಿಕಾರಿಗಳು ಹಾಗೂ ಕಾನ್ಸ್ಟೆಬಲ್ಗಳು ಐದು ವರ್ಷಗಳಿಗೂ ಹೆಚ್ಚು ಸಮಯದಿಂದ ಒಂದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.