ಬೆಂಗಳೂರು, ಮಾರ್ಚ್ 18: ನಗರದ ಮದುವೆ ಸಮಾರಂಭಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ನಡೆಸುತ್ತಿದ್ದ ಆರೋಪಿಯನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಬಾಬು ಅಲಿಯಾಸ್ ‘ಪಲ್ಸರ್ ಬಾಬು’ ಎಂದು ಗುರುತಿಸಲಾಗಿದೆ.

ನಗರದ ಪ್ಯಾಲೇಸ್ ಗ್ರೌಂಡ್ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದರು. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಆರೋಪಿ ದೊಡ್ಡ ಮದುವೆ ಮಂಟಪಗಳನ್ನು ಟಾರ್ಗೆಟ್ ಮಾಡಿಕೊಂಡಿದ್ದಾನೆ ಎಂಬುದು ತಿಳಿದುಬಂದಿದೆ. ವಿಶೇಷವಾಗಿ ಚಿಕ್ಕ ಮಕ್ಕಳನ್ನು ಗುರಿಯಾಗಿಸಿಕೊಂಡು, ಅವರ ಬಳಿಯಿದ್ದ ಚಿನ್ನಾಭರಣ ಮತ್ತು ಮೊಬೈಲ್ಗಳನ್ನು ಕದ್ದು ಪರಾರಿಯಾಗುತ್ತಿದ್ದನು. ಇದಲ್ಲದೆ, ಮದುವೆ ಮನೆಗಳಲ್ಲಿ ಇರಿಸಿದ್ದ ಕ್ಯಾಮೆರಾ, ಲ್ಯಾಪ್ಟಾಪ್ ಹಾಗೂ ಬೈಕ್ಗಳನ್ನೂ ಕಳವು ಮಾಡುತ್ತಿದ್ದ.
ಆರೋಪಿ ಪಲ್ಸರ್ ಬಾಬು ಒಟ್ಟು 19 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಕೊರೊನಾ ಅವಧಿಯಲ್ಲಿ ಜೈಲಿನಿಂದ ಬಿಡುಗಡೆಯಾದ ಬಳಿಕವೂ ಆತ ತನ್ನ ಕಳ್ಳತನ ಚಟವನ್ನು ಮುಂದುವರಿಸಿದ್ದನು. ಕದ್ದ ಚಿನ್ನಾಭರಣಗಳನ್ನು ಕರಗಿಸಿ ತಿರುಪತಿ ಲಾಕೆಟ್ ಮತ್ತು ಉಂಗುರಗಳಾಗಿ ಪರಿವರ್ತಿಸಿಕೊಂಡು, ವೈಭವದ ಜೀವನ ನಡೆಸುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನಿಂದ ಒಟ್ಟು 42.38 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ 2 ಕಾರುಗಳು, 132 ಗ್ರಾಂ ಚಿನ್ನಾಭರಣ, 7 ಮೊಬೈಲ್ಗಳು, 1 ಕ್ಯಾಮೆರಾ, 2 ಲೆನ್ಸ್ಗಳು, 2 ಲ್ಯಾಪ್ಟಾಪ್ಗಳು, 1.20 ಲಕ್ಷ ರೂಪಾಯಿ ನಗದು ಹಾಗೂ 4 ಬೈಕ್ಗಳು ಸೇರಿವೆ.
ಈ ಬಂಧನದಿಂದ ಸದಾಶಿವನಗರ, ವರ್ತೂರು, ಜಾಲಹಳ್ಳಿ, ಹೆಣ್ಣೂರು ಹಾಗೂ ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಒಟ್ಟು 8 ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಪಿಯನ್ನು ಮುಂದಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.