ಪುತ್ತೂರು ಎಪ್ರಿಲ್ 18: ಇಲ್ಲಿನ ಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಶನಿವಾರ ರಾತ್ರಿ ಏರ್ಪಡಿಸಲಾಗಿದ್ದ ಸುಡುಮದ್ದು ಪ್ರದರ್ಶನದ ವೇಳೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಏಳು ಮಂದಿ ಭಕ್ತರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಸುಡುಮದ್ದು ನಿರ್ವಹಣಾ ಮಂಡಳಿಯ ವಿರುದ್ಧ ನಿರ್ಲಕ್ಷ್ಯದ ಆರೋಪದಡಿ ಪ್ರಕರಣ ದಾಖಲಾಗಿದೆ.

ಕುಂದಾಪುರ ನಿವಾಸಿ ಸುಮಂತ್ ಶೆಟ್ಟಿ (20) ಎಂಬವರು ತಮ್ಮ ಸ್ನೇಹಿತರೊಂದಿಗೆ ಜಾತ್ರೆಗೆ ಬಂದಿದ್ದರು. ಜಾತ್ರೆಯ ಗದ್ದೆಯಲ್ಲಿ ಸುಡುಮದ್ದು ಪ್ರದರ್ಶನ ನಡೆಯುತ್ತಿದ್ದಾಗ, ಬೆಂಕಿಯ ಕಿಡಿಗಳು ದೂರದಲ್ಲಿ ನಿಂತು ವೀಕ್ಷಿಸುತ್ತಿದ್ದ ಸುಮಂತ್ ಶೆಟ್ಟಿ, ಭರತ್, ಕೌಶಿಕ್, ಸೌಮ್ಯ, ದೀಪಕ್, ಯಶವಂತ್ ಮತ್ತು ಮೋಹನ್ ಎಂಬವರ ಮೇಲೆ ಬಿದ್ದಿದೆ.
ಗಾಯಗೊಂಡವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸುಡುಮದ್ದು ಪ್ರದರ್ಶನದ ವೇಳೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಸುಮಂತ್ ಶೆಟ್ಟಿ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಎನ್ಎಸ್ (BNS) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.