ಪುತ್ತೂರು ಎಪ್ರಿಲ್ 27: ಖಾಸಗಿ ಜಮೀನಿನಲ್ಲಿರುವ ಹಳೆಯ ಕಟ್ಟಡ ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಹಾಲಿಂಗೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ನಗರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಕಾವು ಹೇಮನಾಥ್ ಶೆಟ್ಟಿ, “ಉಳ್ಳಾಲ್ತಿ ನಡೆಯ ಬಳಿಯಿದ್ದ ಕಟ್ಟಡವು ಅತ್ಯಂತ ಅಪಾಯಕಾರಿ ಸ್ಥಿತಿಯಲ್ಲಿತ್ತು. ಭಕ್ತರೇ ಸ್ವಯಂಪ್ರೇರಿತರಾಗಿ ಆ ಕಟ್ಟಡವನ್ನು ನೆಲಸಮ ಮಾಡಿದ್ದಾರೆ. ಆ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕರು ಮತ್ತು ದೇವಸ್ಥಾನದ ಅಧ್ಯಕ್ಷರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವುದು ಖಂಡನೀಯ,” ಎಂದರು.

ಪೊಲೀಸರು ತಕ್ಷಣವೇ ಈ ಸುಳ್ಳು ಪ್ರಕರಣವನ್ನು ಹಿಂಪಡೆಯಬೇಕು. ಒಂದು ವೇಳೆ ಪ್ರಕರಣವನ್ನು ಕೈಬಿಡದಿದ್ದರೆ, ಸುಳ್ಳು ದೂರು ನೀಡಿದವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ನೂರಾರು ದೇವಸ್ಥಾನದ ಭಕ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು.