ಪುತ್ತೂರು ಜೂನ್ 18: ಪ್ರಯಾಣಿಕರ ದೀರ್ಘಕಾಲದ ಬೇಡಿಕೆಗೆ ಕೊನೆಗೂ ಮುಕ್ತಿ ಸಿಕ್ಕಿದ್ದು, ಪುತ್ತೂರು ರೈಲ್ವೇ ನಿಲ್ದಾಣದ ಒಂದನೇ ಪ್ಲಾಟ್ಫಾರ್ಮ್ನ ಮೇಲ್ಛಾವಣಿ (Shelter) ವಿಸ್ತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

ಪುತ್ತೂರು ರೈಲ್ವೇ ನಿಲ್ದಾಣದ ಒಂದನೇ ಪ್ಲಾಟ್ಫಾರ್ಮ್ಗೆ ಮೇಲ್ಛಾವಣಿ ವಿಸ್ತರಿಸಬೇಕು ಎನ್ನುವ ಒತ್ತಾಯ ರೈಲ್ವೇ ಪ್ರಯಾಣಿಕರಿಂದ ನಿರಂತರವಾಗಿ ಕೇಳಿಬರುತ್ತಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಮಾರು 4.5 ಕೋಟಿ ರೂಪಾಯಿ ವೆಚ್ಚದಲ್ಲಿ 420 ಮೀಟರ್ ಉದ್ದದ ನೂತನ ಮೇಲ್ಛಾವಣಿ ನಿರ್ಮಾಣವಾಗಲಿದೆ. ಇದರೊಂದಿಗೆ ನಿಲ್ದಾಣಕ್ಕೆ ಸುಲಭ ಸಂಪರ್ಕ ಕಲ್ಪಿಸುವ ಎಪಿಎಂಸಿ (APMC) ಅಡ್ಡರಸ್ತೆ ಅಭಿವೃದ್ಧಿ ಕಾಮಗಾರಿಯೂ ಇದೇ ಯೋಜನೆಯಡಿ ಜಂಟಿಯಾಗಿ ನಡೆಯಲಿದೆ.

ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, “ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ ಕಷ್ಟಸಾಧ್ಯವಾಗಿರುವ ಎಲ್ಲಾ ರೈಲ್ವೇ ಅಂಡರ್ ಪಾಸ್ (Railway Underpass) ಗಳ ಸಮಗ್ರ ಅಭಿವೃದ್ಧಿ ಹಾಗೂ ಸುಧಾರಣೆಗಾಗಿ ರೈಲ್ವೇ ಇಲಾಖೆಯಿಂದ ಹೆಚ್ಚುವರಿಯಾಗಿ 18 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಮಳೆ ನೀರು ನಿಲ್ಲದಂತೆ ತಡೆಯುವುದು ಸೇರಿದಂತೆ ಆಧುನಿಕ ತಂತ್ರಜ್ಞಾನದೊಂದಿಗೆ ಶೀಘ್ರದಲ್ಲೇ ಜಿಲ್ಲೆಯ ಎಲ್ಲಾ ಅಂಡರ್ ಪಾಸ್ ಕಾಮಗಾರಿಗಳು ಆರಂಭವಾಗಲಿವೆ,” ಎಂದು ಈ ಸಂದರ್ಭದಲ್ಲಿ ಪ್ರಮುಖ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.