ರಾಜಸ್ಥಾನ ಜುಲೈ 01: ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಎಂಟು ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದು, 24ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಖಾಸಗಿ ಪ್ರಯಾಣಿಕರ ಬಸ್ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಟ್ರಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ.

ದೌಸಾ ಜಿಲ್ಲೆಯ ಕೊಲ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಧನವಾಡಾ ಸಮೀಪ ಈ ಅಪಘಾತ ನಡೆದಿದೆ. ಉತ್ತರಾಖಂಡದ ಋಷಿಕೇಶದಿಂದ ಮಧ್ಯಪ್ರದೇಶದ ಇಂದೋರ್ ಕಡೆಗೆ ತೆರಳುತ್ತಿದ್ದ ‘ಹ್ಯಾನ್ಸ್ ಟ್ರಾವೆಲ್ಸ್’ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಇದಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಡಿಕ್ಕಿಯ ರಭಸ ಎಷ್ಟಿತ್ತೆಂದರೆ, ಅಪಘಾತ ನಡೆದ ಕೆಲವೇ ಕ್ಷಣಗಳಲ್ಲಿ ಬಸ್ ಮತ್ತು ಟ್ರಕ್ ಎರಡರಲ್ಲೂ ಇಂಧನ ಟ್ಯಾಂಕ್ ಸ್ಫೋಟಗೊಂಡು ಬೆಂಕಿಯ ಜ್ವಾಲೆಗಳು ಇಡೀ ವಾಹನವನ್ನು ಆವರಿಸಿಕೊಂಡಿವೆ. ಗಾಢ ನಿದ್ರೆಯಲ್ಲಿದ್ದ ಪ್ರಯಾಣಿಕರು ದಿಢೀರ್ ಬೆಂಕಿ ಕಂಡು ಆತಂಕಗೊಂಡು ಪ್ರಾಣ ಉಳಿಸಿಕೊಳ್ಳಲು ಬಸ್ಸಿನ ಕಿಟಕಿ ಒಡೆದು ಹೊರಗೆ ಜಿಗಿದಿದ್ದಾರೆ. ದೌಸಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಪಿಯೂಷ್ ದೀಕ್ಷಿತ್ ಅವರು ಮಾತನಾಡಿ, “ಬೆಂಕಿಯ ತೀವ್ರತೆಗೆ ಸಿಲುಕಿ ಐವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಇನ್ನು ಮೂವರು ತೀವ್ರ ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮೃತರ ದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ” ಎಂದಿದ್ದಾರೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಗಾಯಗೊಂಡಿರುವ 24ಕ್ಕೂ ಹೆಚ್ಚು ಮಂದಿಯನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಅತಿವೇಗ ಅಥವಾ ಚಾಲಕನಿಗೆ ನಿದ್ರೆಯ ಮಂಪರು ಆವರಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಕೊಲ್ವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಎಕ್ಸ್ಪ್ರೆಸ್ವೇನಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.