ತಿರುಪತಿ , ಏಪ್ರಿಲ್ 04: ಐಪಿಎಲ್ 2026ರ ಸೀಸನ್ನಲ್ಲಿ ಸತತ ಎರಡನೇ ಜಯದ ಗುರಿಯೊಂದಿಗೆ ಕಣಕ್ಕಿಳಿಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಟಗಾರರು ಇದೀಗ ದೇವರ ಮೊರೆ ಹೋಗಿದ್ದಾರೆ. ಶನಿವಾರ ಮುಂಜಾನೆ ಆರ್ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಅವರು ಆಂಧ್ರಪ್ರದೇಶದ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಕಳೆದ ಸೀಸನ್ನಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದಿದ್ದ ಆರ್ಸಿಬಿ, ಈ ಬಾರಿಯೂ ಅಮೋಘ ಪ್ರದರ್ಶನ ನೀಡುತ್ತಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಪಂದ್ಯದಲ್ಲಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದ ನಂತರ, ತಂಡದ ಪ್ರಮುಖ ಆಟಗಾರರು ತಿಮ್ಮಪ್ಪನ ಆಶೀರ್ವಾದ ಪಡೆದಿದ್ದಾರೆ. ಏಪ್ರಿಲ್ 5 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಈ ಭೇಟಿ ನಡೆದಿದೆ.
ವಿಶೇಷವೆಂದರೆ, ಕಳೆದ ಸೀಸನ್ನಲ್ಲೂ ತಂಡದ ಪ್ರಮುಖ ಆಟಗಾರರು ತಿರುಮಲಕ್ಕೆ ಭೇಟಿ ನೀಡಿದ್ದರು. ಆ ಸೀಸನ್ನಲ್ಲಿ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದ್ದರಿಂದ, ತಿಮ್ಮಪ್ಪನ ದರ್ಶನವು ತಂಡಕ್ಕೆ ‘ಲಕ್ಕಿ’ ಎಂಬ ನಂಬಿಕೆ ಅಭಿಮಾನಿಗಳಲ್ಲಿ ಬಲವಾಗಿದೆ. ಇಂದು ಮುಂಜಾನೆ ಸಾಂಪ್ರದಾಯಿಕ ಉಡುಪಿನಲ್ಲಿ ದರ್ಶನ ಪಡೆದ ಆಟಗಾರರು ಈಗಾಗಲೇ ಬೆಂಗಳೂರಿಗೆ ವಾಪಸಾಗಿದ್ದು, ಇಂದು ಸಂಜೆ ನಡೆಯಲಿರುವ ಅಂತಿಮ ತರಬೇತಿ ಶಿಬಿರದಲ್ಲಿ ಭಾಗವಹಿಸಲಿದ್ದಾರೆ.