ಮಂಗಳೂರು, ಅಕ್ಟೋಬರ್ 30: ಮಂಗಳೂರಿನ ಖ್ಯಾತ ಹಿರಿಯ ಚಲನಚಿತ್ರ ನಿರ್ದೇಶಕ ರಿಚರ್ಡ್ ಕ್ಯಾಸ್ಟಲಿನೊ ಅವರು ಡಾ. ವಿಷ್ಣುವರ್ಧನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2019ನೇ ಸಾಲಿನ ಡಾ.ರಾಜಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿ, ವಾರ್ಷಿಕ ಸಾಹಿತ್ಯ ಮತ್ತು ಕಿರುಚಿತ್ರ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಗುರುವಾರ ಪ್ರಕಟಿಸಿದ್ದು ಹಿರಿಯ ನಟಿ ಉಮಾಶ್ರೀ ಡಾ.ರಾಜ್ಕುಮಾರ್ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಮಂಗಳೂರು ಮೂಲದ ರಿಚರ್ಡ್ ಕಾಸ್ಟಲಿನೊ ಖ್ಯಾತ ಚಲನಚಿತ್ರ ನಿರ್ದೇಶಕರಾಗಿದ್ದಾರೆ. ತುಳು, ಕೊಂಕಣಿ, ಕೊಡವ ಮತ್ತು ಕನ್ನಡ ಚಿತ್ರರಂಗಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. 1990ರ ದಶಕದಲ್ಲಿ ತುಳುಚಿತ್ರ ಸೆಪ್ಟೆಂಬರ್ 8ನ್ನು ಕೇವಲ 24 ಗಂಟೆಗಳಲ್ಲಿ ಪೂರ್ಣಗೊಳಿಸಿ, ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.
ಬಂಗಾರ ಪಟ್ಲೆರ್ ಅವರ ಅತ್ಯಂತ ಗಮನ ಸೆಳೆದ ತುಳು ಸಿನಿಮಾವಾಗಿದೆ. ಹಲವು ರಾಷ್ಟ್ರೀಯ ಮತ್ತು ಅಂತರ ರಾಷ್ಟ್ರೀಯ ಪ್ರಶಸ್ತಿಗಳನ್ನು ಗಳಿಸಿ ಕ್ಯಾನ್ಸ್ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದೆ.
ನವೆಂಬರ್ 3ರಂದು ಮೈಸೂರಿನಲ್ಲಿ ನಡೆಯುವ 2018 ಮತ್ತು 2019ನೆ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಈ ಮೂರು ಪ್ರಶಸ್ತಿಗಳು ತಲಾ ಐದು ಲಕ್ಷ ರೂ.ನಗದು ಹಾಗೂ ಐವತ್ತು ಗ್ರಾಂ ಚಿನ್ನದ ಪದಕ ಒಳಗೊಂಡಿದೆ.