ಬಂಟ್ವಾಳ ಮೇ 22 : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಸಂಚಾಲಕ, ಸಾಮಾಜಿಕ, ಧಾರ್ಮಿಕ, ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರಿಗೆ 61 ವರ್ಷ ವಯಸ್ಸಾಗಿತ್ತು. ಸದಾ ನಗುಮುಖ ಗಂಭೀರ ವ್ಯಕ್ತಿತ್ವ, ನೇರ ನಡೆ ನುಡಿಯವರಾಗಿದ್ದ ಕಾಂತಪ್ಪ ಶೆಟ್ಟಿಯವರು ಹೃದಯ ವೈಶಾಲ್ಯತೆಯುಳ್ಳವರಾಗಿದ್ದರು.

ಕೆಲ ಸಮಯಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು ಮಧ್ಯಾಹ್ನ ಅವರು ಕೊನೆಯುಸಿರೆಳೆದಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಮಾತ್ರವಲ್ಲದೇ ಭಾರತೀಯ ಜನತಾ ಪಕ್ಷದಲ್ಲೂ ಗುರುತಿಸಿಕೊಂಡಿದ್ದ ಅವರು ಒಂದು ಬಾರಿ ಪುದು ಜಿಲ್ಲಾ ಪಂಚಾಯತ್ ಚುನಾವಣೆಗೆ ಸ್ಪರ್ಧಿ ಸೋಲನ್ನು ಅನುಭವಿಸಿದ ಬಳಿಕ ರಾಜಕಾರಣದಿಂದ ದೂರ ಇದ್ದು,ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೇರಮಜಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಫರಂಗೀಪೇಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ ಸುದೀರ್ಘ ಅವಧಿಯ ಕಾಲ ಸೇವೆ ಸಲ್ಲಿಸಿದ್ದರು.
ಕೊಡ್ಮಾಣ್ ಶ್ರೀಶಾರದ ಪೂಜಾ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ, ಕೊಡ್ಮಾಣ್ ಪ್ರೌಢಶಾಲಾ ಎಸ್ ಡಿಎಂಸಿ ಸದಸ್ಯರಾಗಿಯು ಹಾಗೂ ವಿವಿಧ ಧಾರ್ಮಿಕ ಕೇಂದ್ರಗಳ ಚಟುವಟಿಕೆಯಲ್ಲಿ ಅವರು ತೊಡಗಿಸಿಕೊಂಡಿದ್ದರು.