Connect with us

FILM

ಸ್ಯಾಂಡಲ್ ವುಡ್ ಹಿರಿಯ ನಟ, ನಿರ್ದೇಶಕ ಸಿ.ವಿ.ಶಿವಶಂಕರ್ ವಿಧಿವಶ

ಬೆಂಗಳೂರು, ಜೂನ್ 27: ಸಿರಿವಂತನಾದರೂ ಕನ್ನಡ ನಾಡಲ್ಲಿ ಮೆರೆವೆ ಹಾಡಿನ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದ ಸ್ಯಾಂಡಲ್ ವುಡ್ ನ ಹಿರಿಯ ನಟ, ನಿರ್ದೇಶಕ ಹಾಗೂ ಚಿತ್ರ ಸಾಹಿತಿ ಸಿ.ವಿ.ಶಿವಶಂಕರ್ (90) ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೊನ್ನೆಯಷ್ಟೇ ಅವರ ಮಗನ ಜೊತೆಗಿನ ವಿಡಿಯೋವೊಂದು ವೈರಲ್ ಆಗಿತ್ತು.

ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಊಟ ಮುಗಿಸಿದ್ದಾರೆ. ಪೂಜೆ ಮಾಡಿದ್ದಾರೆ. ಆ ಬಳಿಕ ಅವರಿಗೆ ತೀವ್ರ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೂ, ಅವರು ಬದುಕುಳಿಯಲಿಲ್ಲ ಎಂದಿದ್ದಾರೆ ಕುಟುಂಬಸ್ಥರು. ಶಿವಶಂಕರ್ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇರದೇ ಇದ್ದರೂ, ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಬಾಲನಟನಾಗಿ ರಂಗಭೂಮಿ ಪ್ರವೇಶ ಮಾಡಿದ್ದ ಸಿ.ವಿ ಶಿವಶಂಕರ್, ಬಾಲನಟರಾಗಿಯೇ ಅನೇಕ ನಾಟಕಗಳನ್ನು ಮಾಡಿದ್ದಾರೆ. ನಂತರ ಅವರು ಸಿನಿಮಾ ರಂಗವನ್ನು ಪ್ರವೇಶಿಸಿ, ರತ್ನ ಮಂಜರಿ, ರತ್ನಗಿರಿ ರಹಸ್ಯ, ಸ್ಕೂಲ್ ಮಾಸ್ಟರ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಹಾಯಕ ನಿರ್ದೇಶಕರಾಗಿಯೂ ಕೆಲಸ ಮಾಡಿರುವ ಅವರು, ‘ಮನೆ ಕಟ್ಟಿ ನೋಡು’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾದವರು.

ಸಿ. ವಿ ಶಿವಶಂಕರ್ ಅವರ ಸಾಧನೆಯನ್ನು ಗುರುತಿಸಿ, 1991ರಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿ, 1994ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, ಸಿಂಗನಲ್ಲೂರು ಪುಟ್ಟಸ್ವಾಮಯ್ಯ ರಾಜ್ ಕುಮಾರ್ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ.
Share Information
Continue Reading
Advertisement
Click to comment

Leave a Reply

Your email address will not be published. Required fields are marked *