ಮಂಗಳೂರು ಜೂನ್ 27: “ರಾಜ್ಯದ ಕಾಂಗ್ರೆಸ್ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ಹೆಸರಿನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿದೆ. ಯೋಜನೆ ಸಮರ್ಪಕವಾಗಿ ಜಾರಿಯಾಗದೆ ಗೃಹಲಕ್ಷ್ಮಿ ಸಮಿತಿಗಳು ಸಂಪೂರ್ಣ ವಿಫಲವಾಗಿವೆ” ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಗಂಭೀರ ಆರೋಪ ಮಾಡಿದ್ದಾರೆ.

ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸದ್ಯದ ಆಡಳಿತ ವ್ಯವಸ್ಥೆ ಮತ್ತು ಸಂಪುಟ ವಿಳಂಬದ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಹಿಂದಿನ ಸಿದ್ದರಾಮಯ್ಯ ನೇತೃತ್ವದ ಆಡಳಿತ ಸರಿಯಿರಲಿಲ್ಲ, ನಾನು ಬಂದಮೇಲೆ ಎಲ್ಲವನ್ನೂ ಸರಿ ಮಾಡುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಈ ಹಿಂದೆ ಹೇಳಿದ್ದರು. ಆದರೆ, ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ 50 ದಿನಗಳಿಗಿಂತ ಹೆಚ್ಚು ಕಳೆದಿದ್ದರೂ ರಾಜ್ಯದಲ್ಲಿ ಯಾವುದೇ ಸುಧಾರಣೆ ಆಗಿಲ್ಲ.
ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆಯನ್ನು ಅಣಕಿಸಿದ ಜಿಲ್ಲಾಧ್ಯಕ್ಷರು, “ರಾಜ್ಯದಲ್ಲಿ ಸದ್ಯ ಮೂರು ಜಿಲ್ಲೆಗಳಿಗೆ ಕೇವಲ ಒಬ್ಬನೇ ಮಂತ್ರಿಯನ್ನು ನೇಮಕ ಮಾಡಲಾಗಿದೆ. 3 ಜಿಲ್ಲೆಗೆ ಒಬ್ಬ ಸಚಿವ ಯಾಕೆ? ಇವರಿಗೆ ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆ ಮಾಡಲು ತಾಕತ್ತಿಲ್ಲವೇ?” ಎಂದು ಪ್ರಶ್ನಿಸಿದರು. “ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ ಮತ್ತೊಮ್ಮೆ ಸಂಪುಟ ವಿಸ್ತರಣೆಗೆ ಕೈಹಾಕಿದರೆ, ಅತೃಪ್ತಿಯ ಜ್ವಾಲೆಯಿಂದ ರಾಜ್ಯ ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಲಿದೆ. ಆ ಆಂತರಿಕ ಕಚ್ಚಾಟದ ಭಯದಿಂದಲೇ ಸರ್ಕಾರ ಸಂಪುಟ ವಿಸ್ತರಣೆ ಮಾಡದೆ ಕಾಲಹರಣ ಮಾಡುತ್ತಿದೆ” ಎಂದು ಕುಂಪಲ ಲೇವಡಿ ಮಾಡಿದರು.