ಮಂಗಳೂರು ಸೆಪ್ಟೆಂಬರ್ 13: ಧರ್ಮಸ್ಥಳ ಕ್ಷೇತ್ರದ ವಿರುದ್ದ ಕೇಳಿ ಬರುತ್ತಿರುವ ಅಪಚಾರ ಖಂಡಿಸಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ನೇತೃತ್ವದಲ್ಲಿ ಸೆಪ್ಟೆಂಬರ್ 14 ರಂದು ಅವಿಭಜಿತ ದ.ಕ. ಜಿಲ್ಲೆಯ ಸಮಸ್ತ ಸಹಕಾರಿ ಬಂಧುಗಳಿಂದ ‘ಧರ್ಮ ಜಾಗೃತಿ ಯಾತ್ರೆ’ ಉಜಿರೆಯಿಂದ ಧರ್ಮಸ್ಥಳಕ್ಕೆ ನಡೆಯಲಿದೆ.


ಈ ಯಾತ್ರೆಯಲ್ಲಿ 1,500ಕ್ಕೂ ಅಧಿಕ ಸಹಕಾರಿ ಸಂಘಗಳು, 3 ಸಾವಿರಕ್ಕೂ ವಾಹನಗಳು ಭಾಗಿಯಾಗಲಿದ್ದು, ಮಧ್ಯಾಹ್ನ 12 ಗಂಟೆಗೆ ಉಜಿರೆಯಿಂದ ಯಾತ್ರೆ ಆರಂಭವಾಗಲಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ, ಸಹಕಾರಿ ಧುರೀಣ ಶಶಿಕುಮಾ‌‌ರ್ ರೈ ಬ್ಯಾಲೊಟ್ಟು ತಿಳಿಸಿದ್ದಾರೆ. ಇಲ್ಲಿನ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಜಿರೆಯಿಂದ ಹೊರಟ ಸಹಕಾರಿಗಳ ಯಾತ್ರೆ ಧರ್ಮಸ್ಥಳ ತಲುಪಿದ ಬಳಿಕ ಮಧ್ಯಾಹ್ನ ಅಮೃತ ವರ್ಷಿಣಿ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಆಶೀರ್ವಚನ ನೀಡಲಿದ್ದು, ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಅಭಿನಂದನೆ ಸಲ್ಲಿಸಲಿದ್ದಾರೆ ಎಂದರು.

ಸಹಬಾಳ್ವೆಯ ಪ್ರತೀಕವಾಗಿರುವ ಕ್ಷೇತ್ರ ಧರ್ಮಸ್ಥಳ ಪ್ರಾಚೀನ ಪಾರಂಪರ್ಯವನ್ನು ಹೊಂದಿರುವ ಪವಿತ್ರ ಕ್ಷೇತ್ರ. ಇಂತಹ ಪಾವಿತ್ರ್ಯತೆಯ ಪೂಜನೀಯ ಕ್ಷೇತ್ರಕ್ಕೆ ಕಳಂಕ ತರುತ್ತಿರುವ ದುಷ್ಟಶಕ್ತಿಗಳ ಷಡ್ಯಂತ್ರವನ್ನು ವಿರೋಧಿಸಿ ಅವಿಜಿತ ಜಿಲ್ಲೆಯ ಸಹಕಾರಿಗಳು ಧರ್ಮಜಾಗೃತಿ ಯಾತ್ರೆ ಹಮ್ಮಿಕೊಂಡಿದ್ದಾರೆ ಎಂದರು. ಧಾರ್ಮಿಕ ಕ್ಷೇತ್ರಗಳ ಮೇಲೆ ಅಪಪ್ರಚಾರ ಮಾಡುವ ಷಡ್ಯಂತರಿಗಳ ವಿರುದ್ಧಈ ಯಾತ್ರೆ ಆಯೋಜಿಸಲಾಗಿದೆ. ಅವಿಭಜಿತ ಜಿಲ್ಲೆಯ ಸಹಕಾರಿ ಸಂಘಗಳು ಯಾವಾಗಲೂ ಸೌಹಾರ್ದತೆಯಿಂದ ಪರಸ್ಪರ ಸಹಬಾಳ್ವೆಯಿಂದ ಕಾರ್ಯನಿರ್ವಹಿಸುತ್ತಿವೆ. ಪವಿತ್ರ ಧರ್ಮಸ್ಥಳ ಕ್ಷೇತ್ರದ ಮೇಲೆ ವಿಶೇಷ ಗೌರವ, ಶ್ರದ್ಧಾ ಭಕ್ತಿಯನ್ನು ಸಹಕಾರ ಕ್ಷೇತ್ರ ಹೊಂದಿದೆ. ಹಾಗಾಗಿ ಈ ಧರ್ಮ ಕ್ಷೇತ್ರಕ್ಕೆ ಅಪಚಾರ ಎಸಗುವ ಷಡ್ಯಂತರಿಗಳಿಗೆ ಸ್ಪಷ್ಟ ಸಂದೇಶ ನೀಡುವ ಚಾರಿತ್ರಿಕ ಯಾತ್ರೆ ಈ ಧರ್ಮ ಜಾಗೃತಿ ಯಾತ್ರೆಯಿಂದ ನಡೆಯಲಿದೆ ಎಂದರು.

Share Information