KARNATAKA
ಮಂಗಳೂರಿನಿಂದ ಚಿತ್ರದುರ್ಗಕ್ಕೆ ಹೊರಟ್ಟಿದ್ದ ಬಸ್ ಶಿವಮೊಗ್ಗದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ – ಇಬ್ಬರು ಸಾವು

ಶಿವಮೊಗ್ಗ ಜುಲೈ 30: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಇಬ್ಬರು ಪ್ರಯಾಣಿಕರು ಸಾವನಪ್ಪಿ 13ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಗಾಜನೂರು ಅಗ್ರಹಾರ ಬಳಿ ತೀರ್ಥಹಳ್ಳಿ-ಶಿವಮೊಗ್ಗ ರಸ್ತೆಯಲ್ಲಿ ನಡೆದಿದೆ.
ದುರ್ಗಾಂಬಾ ಹೆಸರಿನ ಖಾಸಗಿ ಬಸ್ ಮಂಗಳೂರಿನಿಂದ ರಾತ್ರಿ ಹೊರಟಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಗೆ ತಲುಪಬೇಕಿತ್ತು. ಬುಧವಾರ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಬಸ್ಸಿನ ನಿರ್ವಾಹಕ, ಹೊಸನಗರದ ಅಣ್ಣಪ್ಪ (38) ಹಾಗೂ ಪ್ರಯಾಣಿಕ, ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಹರ್ಷಿತ್ (25) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಣ್ಣಪ್ಪ ಈಚೆಗಷ್ಟೇ ಕೆಲಸಕ್ಕೆ ಸೇರಿದ್ದರು ಎಂದು ತಿಳಿದುಬಂದಿದೆ.

ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ 13 ಜನ ಗಾಯಗೊಂಡಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಸೇರಿ ವಿವಿಧೆಡೆ ದಾಖಲು ಮಾಡಲಾಗಿದೆ.
ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬಸ್ಸು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ಸಿನ ಎಡ ಭಾಗ ಸಂಪೂರ್ಣ ಹಾನಿಯಾಗಿದೆ. ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಪಘಾತದಿಂದಾಗಿ ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿ ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು.