ಮಂಗಳೂರು ಎಪ್ರಿಲ್ 15: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಐತಿಹಾಸಿಕ ‘ನಾರಿ ಶಕ್ತಿ ವಂದನ್ ಅಧಿನಿಯಮ’ವನ್ನು ಜಾರಿ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಕಚೇರಿಯಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯಿತು.

ವಿವಿಧ ಕೆಲಸಗಳ ನಿಮಿತ್ತ ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಲು ಬಂದಿದ್ದ ಮಹಿಳೆಯರು, ಕೇಂದ್ರ ಸರ್ಕಾರದ ಐತಿಹಾಸಿಕ ‘ನಾರಿ ಶಕ್ತಿ ವಂದನ್ ಅಧಿನಿಯಮ’ ಜಾರಿಯಾಗುತ್ತಿರುವ ಸಂದರ್ಭದಲ್ಲಿ ಮಹಿಳೆಯರು ಸ್ವಯಂಪ್ರೇರಿತರಾಗಿ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ, ಮಹಿಳೆಯರಿಗೆ ರಾಜಕೀಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಕಳೆದ ದಶಕದಲ್ಲಿ ಭಾರತವು ಕೇವಲ ಮಹಿಳಾ ಕಲ್ಯಾಣದ ಹಂತದಿಂದ ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ದೃಢವಾದ ದಾಪುಗಾಲು ಹಾಕಿದ್ದು, ‘ನಾರಿ ಶಕ್ತಿ’ಯ ನವೋದಯಕ್ಕೆ ಸಾಕ್ಷಿಯಾಗಿದೆ ಎಂದು ಪಾಲ್ಗೊಂಡ ಮಹಿಳೆಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಸತ್ತಿನ ವಿಶೇಷ ಕಲಾಪದಲ್ಲಿ ಈ ಅಧಿನಿಯಮವು ಚರ್ಚೆಯಾಗುತ್ತಿರುವುದು ದೇಶದ ಇತಿಹಾಸದಲ್ಲಿ ಒಂದು ಸುವರ್ಣ ಅಧ್ಯಾಯವಾಗಲಿದೆ. “ಮಹಿಳಾ ಸಬಲೀಕರಣದಿಂದ ಮಹಿಳೆಯರ ನೇತೃತ್ವದ ಅಭಿವೃದ್ಧಿ ಎಂಬ ಆಶಯದೊಂದಿಗೆ ಕೇಂದ್ರ ಸರ್ಕಾರವು ಕೈಗೊಂಡಿರುವ ಈ ಕ್ರಾಂತಿಕಾರಿ ಹೆಜ್ಜೆಗೆ ನಮ್ಮೆಲ್ಲರ ಬೆಂಬಲವಿದೆ ಎಂದು ಇದೇವೇಳೆ ಮಹಿಳೆಯರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ‘ನಾರಿ ಶಕ್ತಿ ವಂದನ್ ಅಧಿನಿಯಮ’ ಎಂದು ಕರೆಯಲಾಗುವ ಮೀಸಲಾತಿ ಕಾನೂನಿನ ತಿದ್ದುಪಡಿಗಳನ್ನು ತರಲು ಮುಂದಾಗಿರುವುದು ಐತಿಹಾಸಿಕ ನಿರ್ಧಾರ. ಕಳೆದ ಒಂದು ದಶಕದಲ್ಲಿ ಭಾರತವು ಕೇವಲ ಮಹಿಳಾ ಕಲ್ಯಾಣದ ಹಂತದಿಂದ ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ದೃಢವಾದ ದಾಪುಗಾಲು ಹಾಕಿದೆ. ಇಂದು ಭಾರತೀಯ ಮಹಿಳೆಯರು ಕೇವಲ ಮನೆಗೆ ಸೀಮಿತವಾಗದೆ, ನಿರ್ಧಾರ ಕೈಗೊಳ್ಳುವ ಉನ್ನತ ಸ್ಥಾನಗಳಲ್ಲಿ ಕುಳಿತು ದೇಶದ ಬದಲಾವಣೆಗೆ ಮುನ್ನುಡಿ ಬರೆಯುತ್ತಿದ್ದಾರೆ. ಸಂಸತ್ತಿನಿಂದ ಹಿಡಿದು ಬಾಹ್ಯಾಕಾಶದವರೆಗೆ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚುತ್ತಿರುವುದು ‘ನಾರಿ ಶಕ್ತಿ’ಯ ನವೋದಯಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.