LATEST NEWS
ಮಂಗಳೂರು – ಕೋಮು ದ್ವೇಷ ನಿಗ್ರಹಕ್ಕೆ ಸ್ಥಾಪನೆಗೊಂಡ ದೇಶದ ಮೊದಲ ವಿಶೇಷ ಕಾರ್ಯಪಡೆ

ಮಂಗಳೂರು ಜೂನ್ 13: ದೇಶದ ಮೊದಲ ಕೋಮು ದ್ವೇಷ ನಿಗ್ರಹಕ್ಕೆ ವಿಶೇಷ ಕಾರ್ಯಪಡೆಯನ್ನು ಮಂಗಳೂರಿನಲ್ಲಿ ಸ್ಥಾಪಿಸಲಾಗಿದ್ದು, ಇಂದು ಅದರ ಉದ್ಘಾಟನೆ ನೇರವೆರಿದೆ. ಈ ವೇಳೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆ ಒಳಗೊಂಡು, ಕೋಮು ಹಿಂಸೆ ನಿಗ್ರಹಕ್ಕಾಗಿ ರಚನೆಯಾಗಿರುವ ವಿಶೇಷ ಕಾರ್ಯಪಡೆಯನ್ನು (ಎಸ್ಎಎಫ್) ಅಗತ್ಯ ಬಂದಲ್ಲಿ ರಾಜ್ಯಕ್ಕೆ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಎಸ್ಎಎಫ್ ಕಚೇರಿ ಹಾಗೂ ಪೊಲೀಸ್ ವಸತಿಗೃಹಗಳ ಸಮುಚ್ಚಯ ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇಂತಹ ಒಂದು ಕಾರ್ಯಪಡೆ ರಚನೆ ಮಾಡಿದೆ. ದ್ವೇಷ ಭಾಷಣ, ಕೋಮು ಸಂಘರ್ಷ ಸೃಷ್ಟಿಸುವವರನ್ನು ಹತ್ತಿಕ್ಕುವ ದಿಸೆಯಲ್ಲಿ ಈ ಕಾರ್ಯಪಡೆ ಕಾರ್ಯನಿರ್ವಹಿಸಲಿದೆ. ಶೈಕ್ಷಣಿಕ ವಾಗಿ, ಸಾಮಾಜಿಕವಾಗಿ, ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ನೆಲೆಸಬೇಕಾಗಿದೆ. ಈ ನೆಲ ಮತ್ತೆ ಕೋಮು ಸೌಹಾರ್ದಕ್ಕೆ ಸಾಕ್ಷಿಯಾಗಬೇಕಾಗಿದೆ ಎಂದರು.

ನಕ್ಸಲ್ ನಿಗ್ರಹ ಪಡೆಯ ಸಿಬ್ಬಂದಿ ಈ ಕಾರ್ಯಪಡೆಯಲ್ಲಿ ಕಾರ್ಯ ನಿರ್ವಹಿಸಲಿದ್ದು, ಅಗತ್ಯ ಬಂದಲ್ಲಿ ಸಿಬ್ಬಂದಿ ಸಂಖ್ಯೆ ಹೆಚ್ಚಿಸಲಾಗುವುದು. ಆದರೆ ಇಲ್ಲಿನ ಜನರು ಇದಕ್ಕೆ ಎಲ್ಲರ ಸಹಕಾರ ಅಗತ್ಯ.
ಈ ಕಾರ್ಯಪಡೆಗೆ ಹೆಚ್ಚು ಕೆಲಸ ಕೊಡದಂತೆ ನಡೆದುಕೊಳ್ಳಬೇಕು. ಬೇರೆ ಜಿಲ್ಲೆಗೆ ಇಂತಹ ಕಾರ್ಯಪಡೆಯ ಅಗತ್ಯ ಬರಲಾರದು ಎಂದು ಭಾವಿಸಿದ್ದೇವೆ. ಒಟ್ಟಿನಲ್ಲಿ ರಾಜ್ಯವು ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು ಎಂದು ಹೇಳಿದರು.