LATEST NEWS
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

ಬೆಂಗಳೂರು, ಜೂನ್ 08: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಇದೀಗ ಕೇಂದ್ರ ಸರಕಾರ ಎನ್ ಐಎ ತನಿಖೆಗೆ ವಹಿಸಿದೆ. ರಾಜ್ಯ ಸರಕಾರದ ಒಪ್ಪಿಗೆ ಇಲ್ಲದಿದ್ದರೂ ಕೇಂದ್ರ ಸರಕಾರ ಈ ಪ್ರಕರಣವನ್ನು ಎನ್ಐಎ ವಹಿಸಿದೆ.
ಕಳೆದ ತಿಂಗಳು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಈವರೆಗೆ 11 ಜನರನ್ನು ಬಂಧಿಸಿದ್ದಾರೆ.

ಇನ್ನು ಈ ಪ್ರಕರಣವನ್ನು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದರು. ಅಲ್ಲದೆ, ಪ್ರಕರಣದ ತನಿಖೆಯನ್ನು NIA ಗೆ ನೀಡುವಂತೆ ಸುಹಾಸ್ ಶೆಟ್ಡಿ ಪೋಷಕರು ಸರ್ಕಾರಕ್ಕೆ ಒತ್ತಾಯಿಸಿದ್ದರು.
ಈ ಬೆನ್ನಲ್ಲೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಗೃಹಸಚಿವಾಲಯ ರಾಷ್ಟ್ರೀಯ ತನಿಖಾ ದಳ (NIA) ಕ್ಕೆ ವಹಿಸಿ ಆದೇಶ ಹೊರಡಿಸಿದೆ.