ಫೆಬ್ರವರಿ 08, ಚಂಡೀಗಢ: ಹರಿಯಾಣದ ಫರಿದಾಬಾದ್ನಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಕರಕುಶಲ ಮೇಳ’ದಲ್ಲಿ ಶನಿವಾರದಂದು ‘ಸುನಾಮಿ ಸ್ವಿಂಗ್’ ಎಂಬ ಬೃಹತ್ ಉಯ್ಯಾಲೆ ಕುಸಿದು ಬಿದ್ದು ಸಂಭವಿಸಿದ ಭೀಕರ ಅವಘಡದಲ್ಲಿ ಓರ್ವ ಪೊಲೀಸ್ ಅಧಿಕಾರಿ ಮೃತಪಟ್ಟು, 12ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡ ಘಟನೆ ನಡೆದಿದೆ.
ಮೃತ ಪೊಲೀಸ್ ಅಧಿಕಾರಿಯನ್ನು ಕರ್ತವ್ಯದಲ್ಲಿ ನಿರತರಾಗಿದ್ದ ಪಲ್ವಲ್ ಜಿಲ್ಲೆಯ ಪೊಲೀಸ್ ಇನ್ಸ್ಪೆಕ್ಟರ್ ಜಗದೀಶ್ ಪ್ರಸಾದ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಟ್ಟು 13 ಮಂದಿ ಗಾಯಗೊಂಡಿದ್ದು ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಕ್ಕೂ ಒಂದು ಗಂಟೆ ಮೊದಲು ಬಲವಾದ ಗಾಳಿಯಿಂದಾಗಿ ಮೇಳದ ಫುಡ್ ಕೋರ್ಟ್ನ ಗೇಟ್ ಬಿದ್ದು ಮಗು ಸೇರಿದಂತೆ ಇಬ್ಬರು ಗಾಯಗೊಂಡಿದ್ದರು ಅನ್ನುವ ಮಾಹಿತಿ ಲಭ್ಯವಾಗಿದೆ.

ಈ ಮೇಳದಲ್ಲಿ ಅಳವಡಿಸಲಾಗಿದ್ದ ‘ಸುನಾಮಿ ಸ್ವಿಂಗ್’ ನಲ್ಲಿ ಚಲಿಸುವಾಗ ಕಾಣಿಸಿಕೊಂಡ ತಾಂತ್ರಿಕ ದೋಷವೇ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ತೀವ್ರ ಸಂತಾಪ ಸೂಚಿಸಿರುವ ಹರಿಯಾಣ ಮುಖ್ಯಮಂತ್ರಿ ನಾಯಬ್ ಸಿಂಗ್ ಸೈನಿ, ಹುತಾತ್ಮರಾದ ಇನ್ಸ್ಪೆಕ್ಟರ್ ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ,” ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಫರೀದಾಬಾದ್ ಜಿಲ್ಲಾಧಿಕಾರಿ ಆಯುಷ್ ಸಿನ್ಹಾ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ಹೆಚ್ಚುವರಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಲಾಗಿದೆ. ಉಯ್ಯಾಲೆಗಳ ಸುರಕ್ಷತಾ ಪ್ರಮಾಣಪತ್ರಗಳ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.