ನವದೆಹಲಿ/ಚೆನ್ನೈ ಜೂನ್ 03: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಮಂಗಳವಾರ ಪಕ್ಷಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಆದರೆ, ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಮತ್ತು ನಿರ್ಧಾರವನ್ನು ಮರುಪರಿಶೀಲಿಸುವಂತೆ ಬಿಜೆಪಿ ಹೈಕಮಾಂಡ್ ಅವರಿಗೆ ತುರ್ತು ಮನವಿ ಮಾಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಪ್ರಾದೇಶಿಕ ಪಕ್ಷವಾದ ಎಐಎಡಿಎಂಕೆ (AIADMK) ಜೊತೆ ಮೈತ್ರಿ ಮಾಡಿಕೊಂಡಿತ್ತು. ಈ ಮೈತ್ರಿ ಹಾಗೂ ಸೀಟು ಹಂಚಿಕೆಯ ಮಾತುಕತೆ ನಡೆದ ರೀತಿಯ ಬಗ್ಗೆ ಅಣ್ಣಾಮಲೈ ತೀವ್ರ ಅಸಮಾಧಾನ ಹೊಂದಿದ್ದರು ಎನ್ನಲಾಗಿದೆ. ಇದರೊಂದಿಗೆ, 2025 ರ ಏಪ್ರಿಲ್ನಲ್ಲಿ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಬಳಿಕ, ಸ್ಥಳೀಯ ಬಿಜೆಪಿ ನಾಯಕರು ತಮ್ಮನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದ್ದಾರೆ ಎಂಬ ಅಸಮಾಧಾನವೂ ಅವರಿಗಿತ್ತು. ಇದೇ ಕಾರಣಕ್ಕೆ ಬೇಸತ್ತು ಅವರು ಮಂಗಳವಾರ ಬೆಳಿಗ್ಗೆ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರನ್ನು ಭೇಟಿಯಾಗಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಅಣ್ಣಾಮಲೈ ಅವರ ರಾಜೀನಾಮೆ ಪತ್ರ ಸ್ವೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್, “ಯಾವುದೇ ಆತುರದ ನಿರ್ಧಾರಕ್ಕೆ ಬರಬೇಡಿ” ಎಂದು ತಿಳಿಸಿದ್ದಲ್ಲದೆ, ತಕ್ಷಣವೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುವಂತೆ ಸೂಚಿಸಿದರು. ಅದರಂತೆ ಮಂಗಳವಾರ ಮಧ್ಯಾಹ್ನ ಅಣ್ಣಾಮಲೈ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಅಣ್ಣಾಮಲೈ ಅವರ ಅಹವಾಲು ಆಲಿಸಿದ ಅಮಿತ್ ಶಾ, ರಾಜೀನಾಮೆಯನ್ನು ಮರುಪರಿಶೀಲಿಸುವಂತೆ ಕೋರಿದ್ದಾರೆ. ಅಲ್ಲದೆ, ಹೈಕಮಾಂಡ್ ನಿಮ್ಮನ್ನು ಮತ್ತೆ ಸಂಪರ್ಕಿಸುವವರೆಗೂ ನವದೆಹಲಿಯಲ್ಲೇ ಉಳಿದುಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಕರ್ನಾಟಕ ಕೇಡರ್ನ ಮಾಜಿ ಐಪಿಎಸ್ ಅಧಿಕಾರಿಯಾಗಿ ದಕ್ಷ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿಯಾಗುವ ಸಾಧ್ಯತೆಯಿದೆ.
ಅಣ್ಣಾಮಲೈ ಅವರ ರಾಜೀನಾಮೆ ಬಿಕ್ಕಟ್ಟನ್ನು ಶಮನಗೊಳಿಸಲು ಹೈಕಮಾಂಡ್ ತೀವ್ರ ಕಸರತ್ತು ನಡೆಸುತ್ತಿದೆ. ಈ ವಿಚಾರವಾಗಿ ಗಂಭೀರ ಚರ್ಚೆ ನಡೆಸಲು ಅಮಿತ್ ಶಾ ಮತ್ತು ನಿತಿನ್ ನವೀನ್ ಅವರು ತಮಿಳುನಾಡು ಬಿಜೆಪಿಯ ಪ್ರಸ್ತುತ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಅವರನ್ನು ತುರ್ತಾಗಿ ದೆಹಲಿಗೆ ಕರೆಸಿಕೊಂಡಿದ್ದಾರೆ. ಶಾ ಅವರ ಸೂಚನೆಯಂತೆ ಸದ್ಯ ದೆಹಲಿಯಲ್ಲೇ ಉಳಿದುಕೊಂಡಿರುವ ಅಣ್ಣಾಮಲೈ, ಬುಧವಾರ ಮಧ್ಯಾಹ್ನದ ಬಳಿಕ ಚೆನ್ನೈಗೆ ವಾಪಸಾಗುವ ಸಾಧ್ಯತೆಯಿದೆ ಎಂದು ಮೂಲಗಳು ವರದಿ ಮಾಡಿವೆ.