ಬಾಗಲಕೋಟೆ, ಜೂನ್ 28: ಜಮಖಂಡಿ ತಾಲೂಕಿನ ಹುನ್ನೂರ ಗ್ರಾಮದ ಬಳಿ ಬರೋಬ್ಬರಿ 150 ಅಡಿ ಆಳದ ಬಾವಿಗೆ ಟ್ಯಾಂಕರ್ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ.
ಕಾರ್ಖಾನೆಯೊಂದರ ತ್ಯಾಜ್ಯವನ್ನು (ವೇಸ್ಟ್) ತುಂಬಿಕೊಂಡು ಬರುತ್ತಿದ್ದ ಟ್ಯಾಂಕರ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಬಾವಿಗೆ ಉರುಳಿ ಬಿದ್ದಿದೆ.
ಆಳವಾದ ಬಾವಿಗೆ ಬಿದ್ದ ರಭಸಕ್ಕೆ ಚಾಲಕ ಮಂಜುನಾಥ ಆಟವಾಳಕರ್ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ದಾರುಣವಾಗಿ ಕೊನೆಯುಸಿರೆಳೆದಿದ್ದಾರೆ. ಮೃತ ಮಂಜುನಾಥ್ ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳವಾಡ ಗ್ರಾಮದ ನಿವಾಸಿಯಾಗಿದ್ದು, ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದರು.
ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಜಮಖಂಡಿ ಗ್ರಾಮೀಣ ಠಾಣೆಯ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. 150 ಅಡಿ ಆಳದ ಬಾವಿಯಿಂದ ಮೃತದೇಹ ಹಾಗೂ ಟ್ಯಾಂಕರ್ ಹೊರತೆಗೆಯಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.