ತುಮಕೂರು ಜನವರಿ 21 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆ ಹಿನ್ನಲೆ ರಾಜ್ಯದಲ್ಲಿ ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಈ ಬಗ್ಗೆ ಮಾತನಾಡಿದ ಅವರು ‘ಶ್ರೀರಾಮ ಮಂದಿರ ಉದ್ಘಾಟನೆ ದಿನ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಪೂಜೆ ನಡೆಯಲಿದೆ. ಬೆಂಗಳೂರಿನ ಮಹಾದೇವಪುರದಲ್ಲಿ ನಿರ್ಮಿಸಿರುವ ಶ್ರೀರಾಮ ಮಂದಿರ ಉದ್ಘಾಟನೆಗೆ ಕರೆದಿದ್ದು, ಅಲ್ಲಿಗೆ ಹೋಗುತ್ತೇನೆ’ ಎಂದರು.
ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ದಿನ ರಾಜ್ಯದಲ್ಲಿ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆಗ್ರಹಿಸಿದ್ದಾರೆ. ಈ ಸಂಬಂಧ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಹಿಂದೂಪರ ಸಂಘಟನೆಗಳು, ಬೆಂಗಳೂರು ವಕೀಲರ ಸಂಘವು ಸಹ ರಜೆ ನೀಡುವಂತೆ ಮನವಿ ಮಾಡಿತ್ತು. ಆದ್ರೆ, ಇದೀಗ ಅಂತಿಮವಾಗಿ ಸಿದ್ದರಾಮಯ್ಯನವರು ರಜೆ ಘೋಷಣೆ ಮಾಡುವುದಿಲ್ಲ ಎಂದು ತಮ್ಮ ನಿಲುವು ಪ್ರಕಟಿಸಿದ್ದಾರೆ