ಮಂಗಳೂರು, ಮೇ 6: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅದನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ತುರ್ತು ಕ್ರಮ ಕೈಗೊಳ್ಳುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಗುರುವಾರ ಪ್ರಮುಖ ಸಭೆ ನಡೆಯಿತು.
ಇಂದಿನವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6ಗಂಟೆಯಿಂದ 10ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶವಿತ್ತು.ಆದರೆ ಬದಲಾದ ಮಾರ್ಗ ಸೂಚಿಯಂತೆ ಶುಕ್ರವಾರದಿಂದ ಬೆಳಗ್ಗೆ 6ಗಂಟೆಯಿಂದ 9ಗಂಟೆವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶವಿರಲಿದೆ.
10ಗಂಟೆಯೊಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಲೇಬೇಕು. ಹತ್ತಿರದ ಮೆಡಿಕಲ್ ಗೆ ಹೋಗುವವರಷ್ಟೇ ಮೆಡಿಕಲ್ ಗೆ ಹೋಗಬಹುದು. ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ಪೊಲೀಸರು ವಾಹನ ಸೀಜ್ ಮಾಡಲಿದ್ದಾರೆ. ಮೇ 15ರ ಬಳಿಕ ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವುದೇ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಮೇ 15ರ ಬಳಿಕ ಅನುಮತಿ ನೀಡಿರುವ ಕಾರ್ಯಕ್ರಮಗಳಿಗೆ ಕಡಿವಾಣ ಹಾಕುವ ಖಡಕ್ ನಿರ್ಧಾರ ಕೈಗೊಳ್ಳಲಾಗಿದೆ.
ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಸಭೆಯಲ್ಲಿ ದಕ್ಷಿಣ ಕನ್ನಡ ಸಂಸದ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್, ಶಾಸಕರುಗಳಾದ ಡಾ.ಭರತ್ ಶೆಟ್ಟಿ, ವೈ,ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ಯು.ಟಿ ಖಾದರ್, ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.