Connect with us

LATEST NEWS

ಕುಡಿಯುವ ನೀರಿನ ಸಮಸ್ಯೆಗಳಿಗೆ ಅಧಿಕಾರಿಗಳು ತುರ್ತಾಗಿ ಸ್ಪಂದಿಸಿ : ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಏಪ್ರಿಲ್ 30 : ಜಿಲ್ಲಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಜನಸಾಮಾನ್ಯರು ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿ, ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ನಗರ ಅಥವಾ ಗ್ರಾಮೀಣ ಭಾಗದಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯವಿರುವ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರಿಗೆ ನೀರಿನ ಯಾವುದೇ ತೊಂದರೆಗಳು ಉಂಟಾಗದAತೆ ನೋಡಿಕೊಳ್ಳಬೇಕು. ಯಾರೊಬ್ಬರೂ ದೂರವಾಣಿ ಮೂಲಕ ನೀರಿನ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದ್ದಲ್ಲಿ 24 ಗಂಟೆಯ ಒಳಗಾಗಿ ಅದನ್ನು ಬಗೆಹರಿಸಬೇಕು. ಮಳೆ ಬರುವವರೆಗೂ ನೀರಿನ ಸಮಸ್ಯೆಗೆ ಸ್ಪಂದಿಸಲು ಸದಾ ಸನ್ನದ್ಧರಾಗಿರಬೇಕು ಎಂದರು.


ಜಾನುವಾರುಗಳಿಗೆ ಮೇವಿನ ಕೊರತೆ ಈವರೆಗೂ ಕಂಡುಬಂದಿಲ್ಲ. ಜಿಲ್ಲೆಯಲ್ಲಿ 2.20 ಲಕ್ಷ ಕ್ಕೂ ಹೆಚ್ಚು ಜಾನುವಾರುಗಳಿದ್ದು, ಮುಂದಿನ 14 ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯತೆ ಇದೆ. ರೈತರು ತಮ್ಮ ಜಾನುವಾರುಗಳಿಗೆ ಮೇವಿನ ಅಭಾವವಾದಲ್ಲಿ ಜಿಲ್ಲೆಯ ಗೋಶಾಲೆಗಳಿಗೆ ದನ- ಕರುಗಳನ್ನು ಬಿಡಬಹುದು ಎಂದ ಅವರು, ಮೇವಿನ ಕೊರತೆ ಉಂಟಾದ ರೈತರುಗಳಿಗೆ ಸರಕಾರಿ ದರದಲ್ಲಿ ಮೇವನ್ನು ನೀಡಲಾಗುವುದು ಎಂದರು. ಹಾಲು ಉತ್ಪಾದಕರ ಒಕ್ಕೂಟದ ಮೂಲಕ ಮೇವು ಮಿನಿಕಿಟ್‌ಗಳನ್ನು ರೈತರಿಗೆ ವಿತರಿಸಿದ್ದು, 979.5 ಎಕರೆ ಪ್ರದೇಶದಲ್ಲಿ ಮೇವನ್ನು ಬೆಳೆಸಲಾಗಿದ್ದು, ಸುಮಾರು 9795 ಮೆಟ್ರಿಕ್‌ನಷ್ಟು ಉತ್ಪಾದನೆ ಮಾಡಲಾಗಿದೆ. ಇವುಗಳ ಜೊತೆಯಲ್ಲಿ ಪಶು ಆಹಾರಗಳನ್ನು ಸಹ ರೈತರಿಗೆ ಒದಗಿಸಲಾಗಿದೆ ಎಂದರು.

ಮಳೆ-ಗಾಳಿಯಿಂದ ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ತಂತಿಗಳು ತುಂಡಾದಲ್ಲಿ ಕೂಡಲೇ ಅವುಗಳನ್ನು ಬದಲಾಯಿಸಲು ಸಿದ್ಧರಾಗಿ, ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗದಂತೆ  ಕ್ರಮವಹಿಸಬೇಕು ಎಂದು ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಸ್ತೆ ಬದಿಯಲ್ಲಿರುವ ಅಪಾಯಕಾರಿಯಾಗುವಂತಹ ಹಾಗೂ ವಿದ್ಯುತ್ ಲೈನ್‌ಗಳಿಗೆ ತೊಂದರೆ ಉಂಟುಮಾಡುವ ಮರಗಳನ್ನು ತೆರೆವುಗೊಳಿಸಲು ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆ ಯವರು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಿದರು. ನೀರೆ, ಪೆರ್ಡೂರು, ಮುದ್ರಾಡಿ, ಬೆಳ್ವೆ, ಉಪ್ಪುಂದದ ಗ್ರಾಮದ ಕೆಲವು ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಈಗಾಗಲೇ ಉಂಟಾಗಿದೆ. ಎಸ್.ಎಲ್.ಆರ್.ಎಮ್ ವಾಹನಗಳಲ್ಲಿ ಸಿಂಟ್ಯಾಕ್ಸ್ಗಳನ್ನು ಅಳವಡಿಸಿಕೊಂಡು ನೀರನ್ನು ಸರಬರಾಜು ಮಾಡಲಾಗುತ್ತಿದೆ. ಇದರಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು ಎಂದರು. ಮಳೆಗಾಲದಲ್ಲಿ ಮಳೆ ನೀರು ಸರಾಗವಾಗಿ ಹರಿದುಹೋಗಲು ತೋಡು ಹಾಗೂ ಚರಂಡಿಗಳಲ್ಲಿರುವ ಹೂಳು, ತರಗೆಲೆ, ಕಸ-ಕಡ್ಡಿಗಳನ್ನು ತೆರವುಗೊಳಿಸಬೇಕು. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಮನೆಗಳಿಗೆ ನುಗ್ಗದಂತೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *