Connect with us

    LATEST NEWS

    ಉಡುಪಿ ಜಿಲ್ಲೆಯ 2.08 ಲಕ್ಷ ಫಲಾನುಭವಿಗಳಿಂದ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ

    ಉಡುಪಿ, ಆಗಸ್ಟ್ 29 : ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣ ಧೈಯದೊಂದಿಗೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದ್ದು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿ.ಪಿ.ಎಲ್ ಮತ್ತು ಎ.ಪಿ.ಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ. ಈ ಯೋಜನೆಯ ನೋಂದಣಿಗೆ ಜುಲೈ 19 ರಂದು ಚಾಲನೆ ನೀಡಲಾಗಿದ್ದು, ಜಿಲ್ಲೆಯಲ್ಲಿ 2,56,850 ಕುಟುಂಬದ ಯಜಮಾನಿಯೆಂದು ನಮೂದಾಗಿರುವ ಪಡಿತರ ಚೀಟಿ ಇದ್ದು, ಆಗಸ್ಟ್ 28 ರ ವರೆಗೆ ಒಟ್ಟು 2,08,695 ಫಲಾನುಭವಿಗಳು ಈ ಯೋಜನೆಗೆ ನೋಂದಾಯಿಸಿದ್ದು, ಶೇ.81.25 ಸಾಧನೆ ಆಗಿರುತ್ತದೆ.


    ಅಗಸ್ಟ್ 30 ರಿಂದ ನಗದು ಸೌಲಭ್ಯವನ್ನು ಎಲ್ಲಾ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲು ಉದ್ದೇಶಿಸಲಾಗಿದ್ದು, ಮೈಸೂರಿನಲ್ಲಿ ರಾಜ್ಯಮಟ್ಟದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ರಾಜ್ಯದ ಎಲ್ಲಾ ಫಲಾನುಭವಿಗಳು ಮೈಸೂರಿನ ಈ ನೇರ ಪ್ರಸಾರ ಕಾರ್ಯಕ್ರಮವನ್ನು ವೀಕ್ಷಿಸಲು ಅನುವಾಗುವಂತೆ ಏಕಕಾಲದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಪ್ರತಿ ವಾರ್ಡ್ಗಳಲ್ಲಿ ಹಾಗೂ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸ್ಥಳೀಯವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ. ಜಿಲ್ಲೆಯ 155 ಗ್ರಾಮ ಪಂಚಾಯಿತಿಯ ಕೇಂದ್ರ ಸ್ಥಾನದಲ್ಲಿ ಹಾಗೂ ಪ್ರತಿ ನಗರ ಸ್ಥಳೀಯ ಸಂಸ್ಥೆಯ 52 ವಾರ್ಡ್ಗಳಲ್ಲಿ ಹಾಗೂ 6 ತಾಲೂಕು ಕೇಂದ್ರಗಳಲ್ಲಿ ಮತ್ತು 1 ಜಿಲ್ಲಾ ಕೇಂದ್ರದಲ್ಲಿ ಸೇರಿದಂತೆ ಒಟ್ಟು 214 ಸ್ಥಳಗಳಲ್ಲಿ ಏಕ ಕಾಲದಲ್ಲಿ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ಎಲ್ಲಾ ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಆಗಿರುವ ಬಗ್ಗೆ ಏಕಕಾಲದಲ್ಲಿ ಅವರ ಮೊಬೈಲ್ ಸಂಖ್ಯೆಗೆ ಸಂದೇಶ ರವಾನಿಸಿ, ಮಂಜೂರಾತಿ ಪತ್ರ ಗೃಹಲಕ್ಷ್ಮಿ ಗುರುತಿನ ಚೀಟಿ ವಿತರಿಸಲಾಗುವುದು.


    ಮೈಸೂರು ಕಾರ್ಯಕ್ರಮದ ಸ್ಥಳದಿಂದ ವಂಡ್ಸೆ ಗ್ರಾಮ ಪಂಚಾಯತ್ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯ ಯುಬಿಎಂಸಿ ಸಭಾಂಗಣದಲ್ಲಿ ಫಲಾನುಭವಿಗಳೊಂದಿಗೆ ಪರಸ್ಪರ ಸಂವಾದ ನಡೆಸಲು ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ಉಡುಪಿ ತಾಲೂಕು ಮತ್ತು ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ನಗರದ ಕಿನ್ನಿಮೂಲ್ಕಿ ಮಿಷನ್ ಕಂಪೌAಡ್‌ನ ಬಾಸೆಲ್ ಮಿಷನರಿಸ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ಆಗಸ್ಟ್ 30 ರಂದು ಮಧ್ಯಾಹ್ನ 12 ಗಂಟೆಗೆ ಚಾಲನೆ ನೀಡಲಾಗುವುದು. ಫಲಾನುಭವಿಗಳು ತಮ್ಮ ಮನೆಗಳ ಮುಂದೆ ಹಾಗೂ ಗೃಹಲಕ್ಷ್ಮೀ ನಡೆಯುವ ಸ್ಥಳಗಳಲ್ಲಿ ಗೃಹಲಕ್ಷ್ಮೀ ಯೋಜನೆಯ ಬಗ್ಗೆ ರಂಗೋಲಿ ಬಿಡಿಸಿ, ನಾ ಗೃಹಲಕ್ಷ್ಮೀ ನಾ ನಾಯಕಿ ಹಾಗೂ ಗೃಹಲಕ್ಷ್ಮೀ ಲೋಗೋವನ್ನು ಚಿತ್ರಿಸಬಹುದು.

    ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಫಲಾನುಭವಿಗಳು ಹಾಗೂ ರಂಗೋಲಿ ಬಗ್ಗೆ ಮೂರು ನಿಮಿಷಗಳ ವೀಡಿಯೋ ಸಿದ್ಧಪಡಿಸಿ, ಗೃಹಲಕ್ಷ್ಮೀ ಯೂಟ್ಯೂಬ್ ಚಾನೆಲ್‌ಗೆ ಅಪ್‌ಲೋಡ್ ಮಾಡಬಹುದಾಗಿದೆ.
    ಗೃಹಲಕ್ಷ್ಮಿ ಯೋಜನೆಯು ಸರ್ಕಾರದ ಸ್ತ್ರೀ ಸ್ವಾವಲಂಬನೆಯತ್ತ ಒಂದು ದಿಟ್ಟ ಹೆಜ್ಜೆಯಾಗಿದ್ದು, ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂ. ಅನ್ನು ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ  ವತಿಸಲಾಗುತ್ತಿದೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಫಲಾನುಭವಿಗಳು, ಗಣ್ಯರು, ಸಾರ್ವಜನಿಕರು ತಮ್ಮ ವಾರ್ಡ್ ಹಾಗೂ ಗ್ರಾಮ ಪಂಚಾಯತ್‌ಗಳಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply